ಹಾಸನ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ದೇವರ ಮೊರೆಹೋಗಿ, ಲಲಿತ ಸಹಸ್ರನಾಮ ಹೋಮವನ್ನು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಳೆನರಸೀಪುರದ ಕೋಟೆ ಮಾರಮ್ಮ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೋಟೆ ಮಾರಮ್ಮ ದೇವಾಲಯಕ್ಕೆ 400 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಈ ಹಿಂದೆ ದಡಾರ, ಪ್ಲೇಗ್ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡಿದಾಗ ಈ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತಂತೆ. ಈ ನಂಬಿಕೆ ನೂರಾರು ವರ್ಷಗಳಿಂದ ನಡೆದು ಬಂದಿದ್ದು, ದೇವರಿಗೆ ಪೂಜೆ ಸಲ್ಲಿಸಿದಾಗಲೆಲ್ಲಾ ಒಳಿತಾಗಿದೆ ಎಂದು ಇಲ್ಲಿಯ ಜನ ನಂಬುತ್ತಾರೆ. ಈಗ ಎಲ್ಲೆಡೆ ಕೊರೊನಾ ಸೋಂಕು ಮಹಾಮಾರಿಯಾಗಿ ಕಾಡುತ್ತಿದೆ. ಈ ಹಿನ್ನೆಲೆ ಪೂರ್ವಜರಂತೆ ಭಕ್ತರು ಕೋಟೆ ಮಾರಮ್ಮ ದೇವರ ಮೊರೆ ಹೋಗುತ್ತಿದ್ದಾರೆ. ಕೊರೊನಾ ನಿವಾರಣೆಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಈಗಾಗಲೇ ರಾಜ್ಯಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ 11 ಮಂದಿಗೆ ತಗುಲಿದ್ದು, ಈಗಾಗಲೇ ಕಲಬುರಗಿಯಲ್ಲಿ ಓರ್ವ ವೃದ್ಧರನ್ನು ಬಲಿ ಪಡೆದಿದೆ. ಇತ್ತ ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಕೊರೊನಾ ರಣಕೇಕೆ ಹಾಕುತ್ತಿದ್ದು, 39 ಮಂದಿಗೆ ಸೋಂಕು ತಟ್ಟಿರುವುದು ದೃಢಪಟ್ಟಿದೆ. ಈವರೆಗೆ ವಿಶ್ವದಾದ್ಯಂತ ಬರೋಬ್ಬರಿ 7,171 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸುಮಾರು 1,82,605 ಮಂದಿಗೆ ಕೊರೊನಾ ತಗುಲಿದೆ ಎಂದು ವರದಿಯಾಗಿದೆ.