ಗುವಾಹತಿ : ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಲ್ಲದೆ ಕೋಳಿ ಮಾಂಸ ಕಟ್ ಮಾಡುವ ಹಾಗೆ ಅವರಿಬ್ಬರನ್ನು ತುಂಡರಿಸಿದ್ದಾನೆ.
ತ್ರಿಪುರಾದಧಲೈ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾವು ಆರೋಪಿಯನ್ನು ಬಂಧಿಸಿದ್ದೇವೆ. ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದೇವೆ. ಆತನ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆ. ಆತ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗದೇ ಇರುವುದರಿಂದ ಕೃತ್ಯದ ಹಿಂದಿನ ಉದ್ದೇಶ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅನೀಶ್ ದಾಸ್ಗುಪ್ತಾ ತಿಳಿಸಿದ್ದಾರೆ.
ಆರೋಪಿಯ ಪತ್ನಿ ಇಬ್ಬರು ಮಕ್ಕಳೊಂದಿಗೆ ಕಳೆದ ನಾಲ್ಕು ತಿಂಗಳಿಂದ ತವರು ಮನೆಯಲ್ಲಿ ವಾಸಿಸುತ್ತಿದ್ದಳು. ಆರೋಪಿ ಹಾಗೂ ಆತನ ಪತ್ನಿ ವಿಚ್ಛೇದನ ಪಡೆದುಕೊಳ್ಳುವ ಪ್ರಕ್ರಿಯೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ.