ಬೆಳಗಾವಿ: ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ97 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮಾಹಿತಿ ನೀಡಿದ್ದಾರೆ.
ಇಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಗಳ ಬಗ್ಗೆ ಕರೆದ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 48 ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡಲಾಗಿದ್ದು, 9 ಡಿನೋಟಿಫೈ ಮಾಡಲಾಗಿರುತ್ತದೆ. ಸದ್ಯಕ್ಕೆ ಇನ್ನೂ 39 ಕಂಟೈನ್ಮೆಂಟ್ ಝೋನ್ ಗಳಿವೆ ಎಂದಿದ್ದಾರೆ.
ಕಂಟೈನ್ಮೆಂಟ್ ಝೋನ್ ಗಳಲ್ಲಿ ಜನರ ಮನೆಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಕ್ರಮಕೈಗೊಳ್ಳಲಾಗಿದೆ. ನೆರೆಯ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಬೆಳಗಾವಿ ಜಿಲ್ಲೆಯ ಮೂಲಕ 45 ಸಾವಿರ ಜನರು 7 ಸಾವಿರ ವಾಹನಗಳು ಪ್ರಯಾಣ ಕೈಗೊಂಡಿದ್ದಾರೆ. ಸರ್ಕಾರದ ಹೊಸ ಮಾರ್ಗಸೂಚಿವ ಪ್ರಕಾರ ಇನ್ನು ಮುಂದೆ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ ಮುಂದಿನ ಹದಿನಾಲ್ಕು ದಿನ ಹೋಮ್ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದರು.
ಎಪಿಎಂಸಿ ಜನಸಂದಣಿ ನಿರ್ವಹಣೆ ಸವಾಲು ಆಗಿತ್ತು. ಆದ್ದರಿಂದ ನಗರದ ಮೂರು ದಿಕ್ಕುಗಳಲ್ಲಿ ಪ್ರತ್ಯೇಕ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ. ಇದೀಗ ಒಂದೇ ಕಡೆ ವಹಿವಾಟು ನಡೆಸಲು ವರ್ತಕರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಇದಲ್ಲದೇ ಮುಂಬರುವ ದಿನಗಳಲ್ಲಿ ದೇವಸ್ಥಾನ ಆರಂಭಗೊಳ್ಳಲಿರುವುದರಿಂದ ಹೊಸ ಸವಾಲು ಎದುರಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ವಿವರಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸ್ಯಾನಿಟೈಜೇಷನ್ ಮಾಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಕೂಡ ಒದಗಿಸಲಾಗುವುದು ಎಂದು ಡಾ.ಬೊಮ್ಮನಹಳ್ಳಿ ವಿವರಿಸಿದರು.
ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ:
ಕಳೆದ ಬಾರಿಯ ಪ್ರವಾಹ ಸ್ಥಿತಿಗತಿಯನ್ನು ಅಧ್ಯಯನ ನಡೆಸಿ ಈ ಬಾರಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ವಿವರಿಸಿದರು.
ಮುಂಗಾರು ಶೇ. 256 ಹೆಚ್ಚಾಗಿದ್ದು, ಬೀಜ-ಗೊಬ್ಬರ ವಿತರಣೆಗೆ ಕ್ರಮ ವಹಿಸಲಾಗಿದೆ. ಪ್ರವಾಹ ನಿರ್ವಹಣೆಗೆ ತಾಲ್ಲೂಕು ಮಟ್ಟದ ಟಾಸ್ಕಫೋರ್ಸ್ ಸಭೆ ನಡೆಸಲು ಸೂಚನೆ ನೀಡಿದರು.
ಪಿಪಿಇ ಕಿಟ್ ಹಾಗೂ ಔಷಧ ಸಾಮಗ್ರಿ ಸೇರಿದಂತೆ ಜಿಲ್ಲೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ವಿ.ಮುನ್ಯಾಳ ವಿವರಿಸಿದರು. 9 ತಾಲ್ಲೂಕು ಆಸ್ಪತ್ರೆಗಳಲ್ಲೂ ತುರ್ತು ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.