ನವದೆಹಲಿ, ಜ.20- ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಮತ್ತೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.ಇದೇ ಜ.31ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಈ ಮುಷ್ಕರಕ್ಕೆ ಕರೆ ನೀಡಿದ್ದು, ಮಾ.11 ರಿಂದ ಮಾ.13ರವರೆಗೆ ಮೂರು ದಿನಗಳ ಕಾಲ ಮುಷ್ಕರ ನಡೆಸುವುದಾಗಿಯೂ ಹೇಳಿಕೊಂಡಿದೆ.

ಒಂದು ವೇಳೆ ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಏ.1ರಿಂದ ನಾವು ಅನಿರ್ದಿಷ್ಟ ಮುಷ್ಕರ ನಡೆಸಲು ನಿರ್ಧರಿಸಿದ್ದೇವೆ ಎಂದು ಯುಎಫ್ಬಿಯು ಸಂಚಾಲಕ ಸಂಜೀವ್ ಕುಮಾರ್ ಬಂಡ್ಲಿಶ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಈ ಸಂಬಂಧ ಭಾರತೀಯ ಬ್ಯಾಂಕ್ ಅಸೋಸಿಯೇಷನ್ ಮುಖ್ಯಸ್ಥರು, ಹಣಕಾಸು ಸೇವಾ ಇಲಾಖೆಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಆಯೋಗದ ಮುಖ್ಯ ಕಾರ್ಮಿಕ ಆಯುಕ್ತರಿಗೆ ಪತ್ರವನ್ನು ಈಗಾಗಲೇ ರವಾನಿಸಲಾಗಿದೆ.
ವೇತನ ಪರಿಷ್ಕರಣೆ, ಐದು ದಿನ ಬ್ಯಾಂಕಿಂಗ್ ಸೇವೆ, ಹೊಸ ಪಿಂಚಣಿ ವ್ಯವಸ್ಥೆ ರದ್ದು ಸೇರಿದಂತೆ ಸುಮಾರು 12 ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
![]()
Laxmi News 24×7