ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ, ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ. 1.32 ಲಕ್ಷ ಕೋಟಿ ರೂ. ಸಾಲ ಮಾಡಿ, ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿ, 22 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್. ಇದರಿಂದ ದೂರಗಾಮಿ ರಾಜದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ. 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದರು.
ಉದಾಹರಣೆಗೆ ನೀರಾವರಿಗೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ. ಇವರು ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಒಳಮೀಸಲಾತಿಗಾಗಿ ಹೋರಾಟ:
ಒಳಮೀಸಲಾತಿ ಗೊಂದಲ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಸಚಿವರ ನಡುವೆ ಗೊಂದಲ ಇದೆ. ಹೀಗಾಗಿ ದಲಿತ ಸಮಾಜಕ್ಕೆ ಅನ್ಯಾಯ ನಡೆಯುತ್ತಿದೆ. ಒಳ ಮೀಸಲಾತಿ ಕಾನೂನು ಮಾಡಿರುವುದೇ ಸರ್ಕಾರ, ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು, ರಾಜ್ಯಪಾಲರ ಒಪ್ಪಿಗೆ ಪಡೆದಿದ್ದಾರೆ. ಮೀಸಲಾತಿ ಪ್ರಮಾಣವನ್ನು 17% ಪರ್ಸೆಂಟ್ ಮಾಡಿ, ಈಗ ಅದನ್ನು ಕೊಡುವುದಿಲ್ಲ ಅಂದರೆ ಹೇಗೆ? ಈ ಬಗ್ಗೆ ಅಡ್ವಕೇಟ್ ಜನರಲ್ ಅವರೇ ಅಫಿಡವಿಟ್ ಸಲ್ಲಿಸಿದ್ದಾರೆ. ಕೋರ್ಟ್ ಯಾವುದೇ ಡೈರೆಕ್ಷನ್ ಕೊಟ್ಟಿಲ್ಲ. ಆ ಕುಂಟು ನೆಪದಲ್ಲಿ ದಲಿತ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ದಲಿತ ಸಮಾಜ ಸ್ಫೋಟಕವಾಗಿ ವಿರೋಧ ಮಾಡುತ್ತಿದೆ. ಕೂಡಲೇ ಸರ್ಕಾರ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಬಿಜೆಪಿ ಕೂಡ ತೀವ್ರ ಹೋರಾಟ ಮಾಡಲಿದೆ ಎಂದು ಹೇಳಿದರು.
Laxmi News 24×7