ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ದಾವಣಗೆರೆ ನಗರದ ಜಿಲ್ಲಾ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗದಗ: ನಗರದ ಚೆನ್ನಮ್ಮ ಸರ್ಕಲ್ದಿಂದ ಡಿಸಿ ಕಚೇರಿವರೆಗೆ ಬೆಳಿಗ್ಗೆ 11 ಗಂಟೆಗೆ ಸಾಂಕೇತಿಕವಾಗಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಾಜ್ಯ ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ.
ಕಲಬುರಗಿ: ಜಿಲ್ಲೆಯ ರೈತರು ನಗರದ ಜಗತ್ ವೃತ್ತದಲ್ಲಿ ಮಧ್ಯಾಹ್ನ 12 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಹುಬ್ಬಳ್ಳಿ: ಜಿಲ್ಲೆಯ ರೈತರು ಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಬೆಳಿಗ್ಗೆ 10.30ಕ್ಕೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮಾಜಿ ಶಾಸಕ ಎನ್.ಎಚ್ ಕೋನರಡ್ಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಗಬ್ಬೂರು ಬೈಪಾಸ್ನಲ್ಲಿ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದ ಹಿನ್ನೆಲೆ ಬೆಳಗಾವಿ ತಾಲೂಕು ಹಾಗೂ ನಗರದಲ್ಲಿ ಯಾವುದೇ ರಸ್ತೆ ತಡೆಯಿಲ್ಲ. ಆದರೆ ರಾಮದುರ್ಗ, ಗೋಕಾಕ್, ಸವದತ್ತಿ ತಾಲೂಕಿನ ಹಲವು ಕಡೆ ರಸ್ತೆ ತಡೆಯಲು ನಿರ್ಧರಿಸಿರುವುದಾಗಿ ರೈತ ಸಂಘಟನೆಗಳ ಮುಖಂಡರು ನ್ಯೂಸ್ಫಸ್ಟ್ಗೆ ಮಾಹಿತಿ ನೀಡಿದ್ದಾರೆ.