ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದ 80 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪಿಡಿಓ ಅವರು ಪೊಲೀಸ್ ಠಾಣೆಯಲ್ಲಿ ನೀರು ಕೇಳಿದ 80 ಜನ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಈ ಹಿನ್ನೆಲೆ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶಿಸಿದ್ದಾರೆ.
ರಾಯಚೂರಿನಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಯಿತು. ಈ ವೇಳೆ ಸಚಿವರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಸಮಸ್ಯೆ ಹಾಗೂ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಾಗಿದ್ದರ ಬಗ್ಗೆ ವರದಿ ನೀಡಲು ಜಿಪಂ ಸಿಇಓಗೆ ಸೂಚಿಸಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ.
ಕುಡಿಯುವ ನೀರಿಗೆ ಆಗ್ರಹಿಸಿ ಏ.3ರಂದು ಸರ್ಜಾಪುರ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದರು. ಇದರಿಂದ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಆರೋಪಿಸಿ 80 ಜನ ಗ್ರಾಮಸ್ಥರ ವಿರುದ್ಧ ಪಿಡಿಓ ಶೋಭಾರಾಣಿ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಕೇಸ್ ವಾಪಸ್ ಪಡೆಯುವಂತೆ ಗ್ರಾಮಸ್ಥರು ಲಿಂಗಸುಗೂರು ಎಸಿ ಕಚೇರಿ ಮುಂದೆ ಹೋರಾಟ ಮಾಡಿದ್ದರು. ಈ ಕುರಿತು ಸಚಿವ ಶರಣಪ್ರಕಾಶ್ ಪಾಟೀಲ್ ಕ್ರಮಕ್ಕೆ ಮುಂದಾಗಿದ್ದಾರೆ.
Laxmi News 24×7