ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು
ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಮಫಲಕ ಪ್ರದರ್ಶಿದ ನಳಿನಿ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸದೇ ಇರಲು ಮೈಸೂರು ವಕೀಲರ ಸಂಘ ನಿರ್ಣಯಿಸಿದೆ.
ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೊಲೀಸರು ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ವಕಾಲತ್ತು ವಹಿಸದಂತೆ ವಕೀಲರಿಗೆ ಸೂಚನೆ ನೀಡಲಾಗಿದೆ.

ಮೈಸೂರು ಜಿಲ್ಲಾ ನ್ಯಾಯಾಲಯದ ಯುವ ವಕೀಲರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣದಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸಬೇಡಿ. ಈ ಹಿಂದೆ ಸಹ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಪರ ಜಿಲ್ಲಾ ನ್ಯಾಯಾಲಯದ ವಕೀಲರು ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಹೀಗಾಗಿ ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಗೆ ಮನವಿ ಸಲ್ಲಿಸಿದ್ದರು.
ಮನವಿಗೆ ಸ್ಪಂದಿಸಿದ ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ, ಆರೋಪಿ ನಳಿನಿ ಪರ ವಕಾಲತ್ತು ವಹಿಸದಿರುವ ಕುರಿತು ನಿರ್ಣಯ ಕೈಗೊಂಡಿದೆ.
Laxmi News 24×7