ಬೆಂಗಳೂರು: ಹಣ್ಣು, ತರಕಾರಿ ಸರಬರಾಜಿನಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ರೈತರಿಂದ ನೇರವಾಗಿ ರೈತರ ಉತ್ಪನ್ನಗಳನ್ನು ಆಯ್ದ ಭಾಗಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಹಾಪ್ ಕಾಮ್ಸ್ ಸಹಯೋಗದೊಂದಿಗೆ ತೋಟಗಾರಿಕಾ ಇಲಾಖೆಯಿಂದ ಮೊಬೈಲ್ ವ್ಯಾನ್ಗಳ ಮೂಲಕ ಮನೆಮನೆಗೆ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಇಲಾಖೆಯ ರೈತ ಉತ್ಪಾದಕಾ ಸಂಸ್ಥೆಗಳ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಸೂಚನೆ ನೀಡಿದ್ದಾರೆ.
ಈಗಾಗಲೇ ಹಾಪ್ ಕಾಮ್ಸ್ಗಳ ಮೂಲಕ ಬೆಂಗಳೂರಿನಲ್ಲಿ 225 ಮಳಿಗೆಗಳು, ಜಿಲ್ಲೆಗಳಲ್ಲಿನ 257 ಮಳಿಗೆಗಳ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಾಪ್ ಕಾಮ್ಸ್ಗಳ ಮೂಲಕ ಪ್ರತಿ ದಿನ 100 ಟನ್ಗಳಷ್ಟು ಹಣ್ಣು ತರಕಾರಿಗಳು ಮಾರಾಟವಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಹಿರಿಯ ಅಧಿಕಾರಿಗಳ ತಂಡದಿಂದ ಜಿಲ್ಲೆಗಳ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಹೊಂದುವಂತೆ ತಿಳಿಸಲಾಗಿದೆ. ಹಣ್ಣು ತರಕಾರಿ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಹಾಗೆಯೇ ದ್ರಾಕ್ಷಿ ಬೇಡಿಕೆ ಇರುವ ಸ್ಥಳಗಳನ್ನು ಗುರುತಿಸಿ ಮಾರಾಟ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲು ಸಭೆಯಲ್ಲಿ ಚರ್ಚಿಸಲಾಗಿದೆ.