ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ‘ಸ್ವಚ್ಛ ಭಾರತ’ದ ಕನಸು ನುಚ್ಚುನೂರಾಗಿದೆ. ದಲಿತ ಕಾಲೋನಿಯ ಮುಖ್ಯ ರಸ್ತೆಯುದ್ದಕ್ಕೂ ಕಸದ ರಾಶಿ ಬಿದ್ದಿದ್ದು, ಸಾಂಕ್ರಾಮಿಕ ರೋಗಗಳ ಭೀತಿಯ ನಡುವೆಯೇ ಗ್ರಾಮಸ್ಥರು ಜೀವನ ಸಾಗಿಸುವಂತಾಗಿದೆ.
ಗಂದಿಗವಾಡ ಗ್ರಾಮದ ದಲಿತ ಕಾಲೋನಿಗೆ ಸಂಪರ್ಕಿಸುವ ರಸ್ತೆಯು ಈಗ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಸಾರ್ವಜನಿಕರು ರಸ್ತೆಯಲ್ಲೇ ಕಸ ಎಸೆಯುತ್ತಿರುವುದರಿಂದ ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮಾತ್ರ ಇತ್ತ ತಲೆಹಾಕಿಯೂ ಮಲಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗ್ರಾಮದಲ್ಲಿ ಕಸ ವಿಲೇವಾರಿ ಘಟಕವಿದ್ದರೂ ಅದು ಇನ್ನೂ ಕಾರ್ಯಾಚರಣೆ ಆರಂಭಿಸಿಲ್ಲ. ಅಚ್ಚರಿಯ ವಿಷಯವೆಂದರೆ, ಕಸ ನಿರ್ವಹಣಾ ವಾಹನ ಲಭ್ಯವಿದ್ದರೂ ಅದನ್ನು ಬಳಸದೆ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.
ಗ್ರಾಮದ ನೈರ್ಮಲ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ನಡೆಗೆ ಕರ್ನಾಟಕ ರಾಜ್ಯ ಗಡಿನಾಡು ಹಿತರಕ್ಷಣಾ ವೇದಿಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೂಡಲೇ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ವೇದಿಕೆಯ ಅಧ್ಯಕ್ಷ ಬಸವರಾಜ್ ಬಂಗಿ, ಈರಯ್ಯ ಹಿರೇಮಠ್ ಹಾಗೂ ಕಿರಣ್ ಮೂಲಿಮನಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಡಳಿತ ಈ ಕೂಡಲೇ ಮಧ್ಯಪ್ರವೇಶಿಸಿ ದಲಿತ ಕಾಲೋನಿಯ ರಸ್ತೆ ಸ್ವಚ್ಛಗೊಳಿಸಿ ನಾಗರಿಕರ ಆರೋಗ್ಯ ರಕ್ಷಣೆಗೆ ಮುಂದಾಗಬೇಕಿದೆ.
Laxmi News 24×7