ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ನಗರ ಸ್ಥಳಿಯ ಸಂಸ್ಥೆಗಳ ಚುನಾವಣೆಯನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸಿದೆ. ಈ ಸಂಬಂಧ ಮಸ್ಟರಿಂಗ್, ಡಿಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರಗಳ ವ್ಯವಸ್ಥೆ ಕುರಿತು ಮಹತ್ವದ ಸೂಚನೆಗಳನ್ನು ಹೊರಡಿಸಲಾಗಿದೆ.
ರಾಜ್ಯ ಚುನಾವಣಾ ಆಯೋಗವು ಮೇ 4ರಂದು ಹೊರಡಿಸಿರುವ ಆದೇಶದಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಮತದಾನ ಸಾಮಗ್ರಿಗಳ ವಿತರಣೆ, ಸಿಬ್ಬಂದಿ ನಿಯೋಜನೆ, ಭದ್ರತಾ ವ್ಯವಸ್ಥೆ ಮತ್ತು ವಾಹನ ವ್ಯವಸ್ಥೆಯನ್ನು ಪೂರ್ವಭಾವಿಯಾಗಿ ಸಿದ್ಧಪಡಿಸುವಂತೆ ತಿಳಿಸಲಾಗಿದೆ.
ಮತ ಎಣಿಕೆ ಕಾರ್ಯವೂ ಸುಗಮವಾಗಿ ನಡೆಯುವಂತೆ ಪ್ರತ್ಯೇಕ ಕೇಂದ್ರಗಳನ್ನು ನಿಗದಿಪಡಿಸಿ, ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಆಯೋಗ ನಿರ್ದೇಶನ ನೀಡಿದೆ. ಅಭ್ಯರ್ಥಿಗಳು, ಚುನಾವಣಾ ಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಕೇಂದ್ರಗಳಲ್ಲಿ ಸ್ಪಷ್ಟ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.
ಮೇ 14ರಂದು ನಡೆಯಲಿರುವ ಚುನಾವಣಾ ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಜಿಲ್ಲಾಧಿಕಾರಿಗಳು, ಚುನಾವಣಾಧಿಕಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಆಯೋಗ ಸ್ಪಷ್ಟಪಡಿಸಿದೆ. ಒಟ್ಟಾರೆ, ಜಿಬಿಎ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಆರಂಭಿಸಿದೆ.
Laxmi News 24×7