ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ರಾಜಕೀಯದ ಬಣ್ಣಕೊಡುತ್ತಿರುವುದು ದುರ್ದೈವದ ಸಂಗತಿ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಯಾವುದೇ ಪ್ರತಿಭಟನೆಗಳಲ್ಲಿ ನಡೆಯುವ ಹಿಂಸಾಕೃತ್ಯಗಳು ಅಕ್ಷಮ್ಯ ಮತ್ತು ಖಂಡನೀಯ. ದೆಹಲಿಯಲ್ಲಿ ಜ.26 ರಂದು ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಕಾಣದ ಕೈಗಳು ದುಷ್ಕೃತ್ಯ ನಡೆಸಿವೆ ಎಂಬ ಅನುಮಾನ ಕಂಡುಬರುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರ ಈ ಬಗ್ಗೆ ಉನ್ನತಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಕೃಷಿ ಮಸೂದೆ ವಿರುದ್ಧದ ಹೋರಾಟಗಳನ್ನು ಹತ್ತಿಕ್ಕಲು ಪ್ರಯತ್ನಿಸಿದಷ್ಟು ಹೋರಾಟ ಪ್ರಬಲವಾಗುತ್ತಿದೆ. ಹೀಗಾಗಿ, ಸರ್ಕಾರ ತಡಮಾಡದೇ ರೈತರನ್ನು ಮಾತುಕತೆಗೆ ಆಹ್ವಾನಿಸಬೇಕು ಎಂದು ಆಗ್ರಹಿಸಿದ್ದಾರೆ.