ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು.
‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ, ‘ಹಿಂಗಾರು ಹಂಗಾಮಿಗೆ ಬೇಕಾಗುವ ಜೋಳ, ಕಡಲೆ, ಗೋಧಿ, ಸೂರ್ಯಕಾಂತಿ ಬೀಜಗಳನ್ನು ದಾಸ್ತಾನು ಮಾಡಲಾಗಿದೆ.
ರೈತ ಸಂಪರ್ಕ ಕೇಂದ್ರಗಳಾದ ಗೋಕಾಕ, ಅರಭಾಂವಿ, ಕೌಜಲಗಿ, ಉಪ ಮಾರಾಟ ಕೇಂದ್ರಗಳಾದ ಖನಗಾಂವ, ಅಂಕಲಗಿ, ಮೂಡಲಗಿ, ಯಾದವಾಡದಲ್ಲಿ ರಿಯಾಯತಿ ದರದಲ್ಲಿ ಪಡೆಯಬಹುದು’ ಎಂದು ಕೋರಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ತುಕಾರಾಮ ಕಾಗಲ ಮತ್ತು ಮಡ್ಡೆಪ್ಪ ತೋಳಿನವರ ಇದ್ದರು.