ಬೆಂಗಳೂರು:ಕರ್ನಾಟಕದ ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇಂದು (ಫೆಬ್ರವರಿ 05) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ ದೊರೆತ್ತಿದೆ. ಇದರೊಂದಿಗೆ ಸ್ಥಳೀಯ ಸಂಸ್ಥೆ ಅಂದ್ರೆ ಜಿಲ್ಲಾ, ತಾಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ.
ಮತಗಳ್ಳತನದ ಪ್ರಕರಣಗಳು ಬಯಲಾದ ಬಳಿಕ ಜನಸಾಮಾನ್ಯರಲ್ಲಿ ಇವಿಎಂ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳು ಬಂದಿವೆ. ಆದ್ದರಿಂದ ಸಚಿವ ಸಂಪುಟವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲು ಬ್ಯಾಲೇಟ್ ಪೇಪರ್ ಮೂಲಕ ನಡೆಸುವಂತೆ ಚುನಾವಣೆ ಆಯೋಗಕ್ಕೆ ತಿಳಿಸಲು ನಿರ್ಧರಿಸಲಾಗಿದೆ. ಈಗಾಗಲೇ ಗ್ರೇಟರ್ ಬೆಂಗಳೂರು (ಜಿಬಿಎ) ಚುನಾವಣೆಯನ್ನೂ ಸಹ ಬ್ಯಾಲೆಟ್ ಪೇಪರ್ ನಡೆಸಲು ನಿರ್ಣಯಿಸಿದ್ದು, ಈ ಬಗ್ಗೆ ರಾಜ್ಯ ಚುನಾವಣೆ ಆಯೋಗವೂ ಸಹ ಜಿಬಿಎ ಎಲೆಕ್ಷನ್ ನಲ್ಲಿ ಇವಿಎಂ ಬಳಸದಿರಲು ತಿಳಿಸಿದೆ. ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಹ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.
ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ 2026ರ ಏಪ್ರಿಲ್- ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರಕಾರ ಸಜ್ಜಾಗಿದ್ದು, ಪೂರ್ವಸಿದ್ಧತೆಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಕೂಡ ನೀಡಿದೆ. ಈಗಾಗಲೇ ರಾಜ್ಯ ಚುನಾವಣಾ ಆಯೋಗವು ಅವಧಿ ಪೂರ್ಣಗೊಂಡ ಗ್ರಾಪಂಗಳಿಗೆ ನಿಗದಿತ ಕಾಲಮಿತಿಯಲ್ಲಿ ಮೀಸಲು ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ.
ರಾಜ್ಯದ 5,948 ಗ್ರಾಪಂಗಳ ಪೈಕಿ 5,698 ಗ್ರಾಪಂಗಳಿಗೆ 2020 ಡಿಸೆಂಬರ್ನಲ್ಲಿ ಚುನಾವಣೆ ಆಗಿತ್ತು. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ 2021- 22ರಲ್ಲಿ ನಡೆದಿದ್ದರಿಂದ 2026ರ ಫೆಬ್ರವರಿ ಎರಡನೇ ವಾರಕ್ಕೆ ಈ ಪಂಚಾಯಿತಿ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿದೆ. ಇದರೊಟ್ಟಿಗೆ 2026ರ ಮಾರ್ಚ್ಗೆ ಮುಗಿಯುವ 92 ಗ್ರಾಪಂಗಳನ್ನು ಸೇರಿಸಿ ಚುನಾವಣೆ ನಡೆಸಲು ಸರಕಾರ ತಯಾರಿ ನಡೆಸಿದೆ. ಈಗಾಗಲೇ ರಾಜ್ಯದ 187 ನಗರ ಸ್ಥಳೀಯ ಸಂಸ್ಥೆಗಳ ಕೌನ್ಸಿಲ್ ಅವಧಿ ಮುಗಿದಿದೆ. 2021ರಿಂದಲೇ ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 240 ತಾಲೂಕು ಪಂಾಯಿತಿಗಳಿಗೆ ಎಲೆಕ್ಷನ್ ನಡೆದಿರುವುದರಿಂದ ಚುನಾಯಿತ ಪ್ರತಿನಿಧಿಗಳಿಲ್ಲ. ಹೀಗಾಗಿ ಏಪ್ರಿಲ್, ಮೇನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಾಧ್ಯತೆಗಳಿವೆ.
Laxmi News 24×7