ಖಾನಾಪುರ: ತಾಲೂಕಿನ ಕಣಕುಂಬಿ ಗ್ರಾಮದಲ್ಲಿ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಂಡಳ ವತಿಯಿಂದ ಆಯೋಜಿಸಲಾಗಿರುವ 35ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಣಪತಿ ಬಪ್ಪನ ‘ಭವ್ಯ ಆಗಮನ’ (ಆಗಮನೋತ್ಸವ) ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು.
ಗಣೇಶೋತ್ಸವದ ಅಂಗವಾಗಿ ವಿಶೇಷವಾಗಿ ಆಯೋಜಿಸಿದ್ದ ಆಗಮನೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾಗವಹಿಸಿ, ಭಕ್ತರೊಂದಿಗೆ ಸಂಭ್ರಮದಲ್ಲಿ ಪಾಲ್ಗೊಂಡರು.
ಕಣಕುಂಬಿಯಲ್ಲಿ ಕಳೆದ 35 ವರ್ಷಗಳಿಂದ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಂಡಳ ವತಿಯಿಂದ ಗಣೇಶೋತ್ಸವವನ್ನು ಸಾಂಪ್ರದಾಯಿಕ ಹಾಗೂ ಭಕ್ತಿಭಾವದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಗಣೇಶೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಗ್ರಾಮದ ಜನತೆ ಹಾಗೂ ಸುತ್ತಮುತ್ತಲಿನ ಭಕ್ತರು ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ.
ಈ ಬಾರಿಯ 35ನೇ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ‘ಭವ್ಯ ಆಗಮನ’ ಕಾರ್ಯಕ್ರಮದಲ್ಲಿ ಭಕ್ತರಲ್ಲಿ ವಿಶೇಷ ಸಂಭ್ರಮ ಮನೆ ಮಾಡಿತ್ತು.
ಮಹಿಳೆಯರು, ಮಕ್ಕಳು ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಭಾವ ಮೆರೆದರು.
ಈ ಸಂದರ್ಭದಲ್ಲಿ ರಾಜಾರಾಮ ಗಾವಡೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ ನಾಯ್ಕ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಕೊರವಿ ಸೇರಿದಂತೆ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
35ನೇ ವರ್ಷದ ಗಣೇಶೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಮಂಡಳಿಯ ಸದಸ್ಯರು ಕೈಗೊಂಡಿರುವ ಸಿದ್ಧತೆಗಳಿಗೆ ಚನ್ನರಾಜ ಹಟ್ಟಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.
Laxmi News 24×7