ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಬಿರುಸುಗೊಂಡಿದೆ. ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಹರ್ಷ ತಂದಿದೆ.
ಕೊಡಗು ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಮಳೆ ಕೊರತೆಯಿಂದ ಜಲಾಶಯದ ನೀರಿನ ಮಟ್ಟ ಕುಸಿದಿದ್ದರೂ, ಇದೀಗ ಕಳೆದ 4-5 ದಿನಗಳಿಂದ. ಸುರಿಯುತ್ತಿರುವ ಮಳೆ ಆಶಾಕಿರಣ ಮೂಡಿಸಿದೆ. ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಸುಮಾರು 8 ಅಡಿ ನೀರು ಸಂಗ್ರಹವಾದ್ರೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಮಳೆ ಕೊರತೆಯಿಂದ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಮನೆ ಮಾಡಿತ್ತು. ಆದರೀಗ ಜಲಾಶಯಕ್ಕೆ ಹೆಚ್ಚುತ್ತಿರುವ ಒಳಹರಿವು ಜನರ ಆತಂಕವನ್ನು ದೂರ ಮಾಡಿದ್ದು, ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಸೋಮವಾರಪೇಟೆ, ಹಾಸನ ಹಾಗೂ ಮೈಸೂರು ಭಾಗದ ರೈತರು ಸಹ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಮಳೆ ಇದೇ ರೀತಿ ಮುಂದುವರಿದರೆ ಹಾರಂಗಿ ಜಲಾಶಯ ಶೀಘ್ರದಲ್ಲೇ ಭರ್ತಿಯಾಗುವ ಸಾಧ್ಯತೆ ಇದ್ದು, ಕಾವೇರಿ ಜಲಾನಯನ ಪ್ರದೇಶದ ಜನರಿಗೆ ಹಾಗೂ ರೈತರಿಗೆ ಇದು ಸಂತಸದ ಸುದ್ದಿಯಾಗಿದೆ.
Laxmi News 24×7