ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ 6 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕರ್ನಾಟಕಕ್ಕೆ ಒಟ್ಟು 98 ಸಾವಿರದಿಂದ 1 ಲಕ್ಷ ಕ್ಯೂಸೆಕ್ಗೂ ಹೆಚ್ಚು ನೀರಿನ ಒಳಹರಿವು ದಾಖಲಾಗಿದ್ದು, ಕಳೆದ ಒಂದೇ ರಾತ್ರಿ ಕೃಷ್ಣಾ ನದಿಗೆ 28 ಸಾವಿರ ಕ್ಯೂಸೆಕ್ ನೀರು ಹೆಚ್ಚುವರಿಯಾಗಿ ಹರಿದು ಬಂದಿದೆ.
ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ, ಘಟಪ್ರಭಾ, ಮಲಪ್ರಭಾ ಹಾಗೂ ಮಾರ್ಕಂಡೇಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಭಾರೀ ಒಳಹರಿವಿನಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 8 ಕೆಳಹಂತದ ಸೇತುವೆಗಳು ಜಲಾವೃತವಾಗಿವೆ. ಮುಲ್ಲಾಂಕಿ–ದತ್ತವಾಡ, ಕಾರದಗಾ–ಬೋಜ್, ಅಕ್ಕೋಳ–ಸಿದ್ನಾಳ, ಜತ್ರಾಟ್–ಭೀವಶಿ, ಬಾರವಾಡ–ಕನ್ನೂರ ಹಾಗೂ ಬೋಜವಾಡಿ–ಗಜವರವಾಡಿ ಸಂಪರ್ಕ ಸೇತುವೆಗಳು ಸೇರಿದಂತೆ ಹಲವು ಸೇತುವೆಗಳು ನೀರಿನಲ್ಲಿ ಮುಳುಗಿವೆ. ಪರಿಣಾಮ 16ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನರು ಪರ್ಯಾಯ ಮಾರ್ಗಗಳಲ್ಲಿ ಸಂಚಾರ ಮಾಡುತ್ತಿದ್ದಾರೆ.
ದೂದಗಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಪರಿಣಾಮ ನದಿ ಪಾತ್ರದ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ನಿಪ್ಪಾಣಿ ತಾಲೂಕಿನ ಶಿರದವಾಡ ಗ್ರಾಮದ ಗದ್ದೆಗಳಲ್ಲಿ ಜೋಳ, ಉದ್ದು ಹಾಗೂ ಸೊಯಾಬೀನ್ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ, ರೈತರು ಭಾರೀ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಗಿ ಕಾಯುತ್ತಿದ್ದ ಬೆಳೆಗಳು ಇದೀಗ ಅತಿಯಾದ ನೀರಿನಿಂದ ಹಾನಿಯಾಗಿವೆ.
Laxmi News 24×7