ರಾಯಚೂರು: ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು ರಾಯಚೂರಿನಲ್ಲಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ.
ದೇವಸ್ಥಾನಕ್ಕೆ ಭಕ್ತರು ತೆರಳದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. ಕೃಷ್ಣಾ ಮೇಲ್ಬಾಗದಲ್ಲಿ ಉತ್ತಮ ಮಳೆ ಹಿನ್ನೆಲೆ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಡ್ಯಾಮ್ ಭರ್ತಿಯಾಗಲು ಇನ್ನೂ ನಾಲ್ಕು ಟಿಎಂಸಿ ಮಾತ್ರ ಬಾಕಿಯಿದೆ. ಹೀಗಾಗಿ ಸದ್ಯ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ 1.1 ಲಕ್ಷ ಕ್ಯೂಸೆಕ್ ಒಳಹರಿವು ಇದೆ.
ಆಲಮಟ್ಟಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹರಿದು ಬಂದರೆ ನಾರಾಯಣಪುರ ಜಲಾಶಯದ ಹೊರ ಹರಿವನ್ನೂ ಕ್ರಮೇಣ ಹೆಚ್ಚಿಸಲಾಗುತ್ತದೆ. ಈಗಾಗಲೇ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆ ಹಂತದಲ್ಲಿದೆ. ಇನ್ನೂ ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿದು ಬಂದರೆ ರಾಯಚೂರು, ಲಿಂಗಸುಗೂರು, ದೇವದುರ್ಗ ತಾಲೂಕಿನಲ್ಲಿ ಹಲವು ಸೇತುವೆಗಳು ಮುಳುಗಡೆಯಾಗಲಿವೆ. ಕೃಷ್ಣೇ ತುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
Laxmi News 24×7