ಹುಬ್ಬಳ್ಳಿ: ವಿಜಯಪುರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಕೊರೊನಾ ವೈರಾಣು ಹರಡಿರುವುದರಿಂದ, ಹುಬ್ಬಳ್ಳಿಯಿಂದ ಈ ಭಾಗಕ್ಕೆ ತೆರಳುವ ಏಳು ಬಸ್ಸುಗಳು ಹಾಗೂ ರಾಜ್ಯದ ಕಲಬುರಗಿಗೆ ತೆರಳುವ ಸ್ಲೀಪರ್ ಕೋಚ್ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಈ ಕುರಿತು ವಾಕರಸಾಸಂ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಕ ಹೆಚ್.ರಾಮನಗೌಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರನ್ನು ನಿಯಂತ್ರಿಸಲು ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ಸಾರಿಗೆ ಸಂಸ್ಥೆಗಳ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ ಮಹಾರಾಷ್ಟ್ರದ ಸೊಲ್ಲಾಪುರ, ಔರಂಗಾಬಾದ್, ಬಾರ್ಸಿ ಹಾಗೂ ಪಂಡರಾಪುರಕ್ಕೆ ತೆರಳುವ ಏಳು ಬಸ್ಸುಗಳ ಸಂಚಾರವನ್ನು ತಕ್ಷಣದಿಂದ ಸ್ಥಗಿತಗೊಳಿಸಲಾಗಿದೆ. ಹುಬ್ಬಳ್ಳಿ-ಕಲಬುರಗಿ ಸ್ಲೀಪರ್ ಕೋಚ್ ಬಸ್ ಸಂಚಾರ ಈಗಾಗಲೇ ಸ್ಥಗಿತಗೊಳಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
Laxmi News 24×7