ಕೋಲಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ನನಗೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುತ್ತಾರೆ ಎಂಬ ನಂಬಿಕೆಯಿದೆ ಎಂದು ಮಾಲೂರು ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ.
ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಧಿವೇಶನ ಮುಗಿದ ಬಳಿಕ ಕೆಎಂಎಫ್ ಚುನಾವಣೆ ನಡೆಯಲಿದ್ದು, ಈ ಬಾರಿ ನನಗೆ ಅವಕಾಶ ಸಿಗುವ ನಿರೀಕ್ಷೆಯಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭೀಮಾ ನಾಯಕ್ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆಗ ನಾನೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೆ. ನನ್ನ ಪರವಾಗಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರು ಬೆಂಬಲವಾಗಿ ನಿಂತಿದ್ದರು. ಆದರೆ ಸಿದ್ದರಾಮಯ್ಯ ಅವರು ಭೀಮಾ ನಾಯಕ್ ಅವರಿಗೆ ಒಂದು ವರ್ಷ ಅವಕಾಶ ನೀಡಿ, ಬಳಿಕ ನನಗೆ ಅವಕಾಶ ನೀಡುವುದಾಗಿ ಅಂದು ಭರವಸೆ ನೀಡಿದ್ದರು. ಇದೀಗ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಅವರು ಈ ಹಿಂದೆ ಕೊಟ್ಟ ಮಾತಿನಂತೆ ಅವಕಾಶ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ರಾಜ್ಯದಲ್ಲಿ ಹಲವು ಕನಸುಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿವೇಶನ ಕರೆದಿದ್ದರು. ಆದರೆ ವಿರೋಧ ಪಕ್ಷದವರು ನಾಗೇಂದ್ರ ಪ್ರಕರಣವನ್ನು ಮುಂದಿಟ್ಟುಕೊಂಡು ಇಡೀ ಅಧಿವೇಶನದ ಸಮಯವನ್ನು ಹಾಳು ಮಾಡಿದ್ದಾರೆ. ಪ್ರತಿ ಶಾಸಕರಿಗೂ ತಮ್ಮ ಜಿಲ್ಲೆ ಹಾಗೂ ತಾಲೂಕುಗಳ ಸಮಸ್ಯೆಗಳ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ಬೇಕಿತ್ತು. ಆದರೆ ಬಿಜೆಪಿ ನಾಯಕರು ನಾಗೇಂದ್ರ ವಿಚಾರವನ್ನೇ ಮುಂದಿಟ್ಟುಕೊಂಡು ಸದನದ ಸಮಯ ವ್ಯರ್ಥ ಮಾಡಿದ್ದಾರೆ ಎಂದು ಟೀಕಿಸಿದರು.
ಇನ್ನು 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ. ಸಿಎಲ್ಪಿ ಸಭೆಯಲ್ಲೂ ಈ ಬಗ್ಗೆ ಆಳವಾದ ಚರ್ಚೆ ನಡೆದಿದೆ ಎಂದು ತಿಳಿಸಿದರು.
Laxmi News 24×7