ಬೆಂಗಳೂರು, ಫೆ.17- ಕಾನೂನು ಸುವ್ಯವಸ್ಥೆ ಪಾಲನೆ ಮಾಡಬೇಕಾದ ರಾಜ್ಯಸರ್ಕಾರವೇ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಶಾಸಕಾಂಗ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಹೀನ್ ಶಾಲೆ ವಿಷಯದಲ್ಲಿ ರಾಜ್ಯ ಸರ್ಕಾರ ಕಾನೂನನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿರುವುದು ಸ್ಪಷ್ಟವಾಗಿದೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಪೊಲೀಸರ ಮೂಲಕ ಬೆದರಿಸಲಾಗುತ್ತಿದೆ.
ಕಾನೂನು ಎಲ್ಲರಿಗೂ ಒಂದೇ ಇರಬೇಕು. ಬಿಜೆಪಿ ತನ್ನ ಪಕ್ಷದ ನಾಯಕರ ರಕ್ಷಣೆಗೆ ಒಂದು ರೀತಿಯ ಧೋರಣೆ. ಬೇರೆಯವರ ವಿಷಯದಲ್ಲಿ ಮತ್ತೊಂದು ರೀತಿಯ ಧೋರಣೆ ಅನುಸರಿಸುತ್ತಿದೆ. ಇದು ಸಂಪೂರ್ಣ ಕಾನೂನು ಬಾಹಿರ.
ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಹೊಂದಿದೆ. ಆದರೆ ತಾನೇ ಮುಂದಾಗಿ ಭಾವನಾತ್ಮಕ ವಿಷಯಗಳನ್ನು ಪ್ರಚೋದಿಸುವ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದರು.