ಬೆಳಗಾವಿ: ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಭೀತಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಹತ್ತಾರು ಸಮಸ್ಯೆಗಳು ಉದ್ಬವಿಸಿದ್ದು, ರೈತರು, ಕೂಲಿ ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿ ಬುಧವಾರ ಬೆಳಗಾವಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮನವಿ ಸಲ್ಲಿಸಿದರು.
ಈಗಾಗಲೇ ಮಳೆಯ ಅಭಾವದಿಂದಾಗಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಬ್ಬು ಬೆಳೆಗೆ ಗೊಣ್ಣೆಹುಳು ರೋಗದ ಹಾವಳಿ, ಜಲಾಶಯಗಳಲ್ಲಿ ನೀರು ಬರಿದಾಗಿರುವುದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮೂಲಕ ಜನರ ರಕ್ಷಣೆಗೆ ನಿಲ್ಲಬೇಕು ಎಂದು ವಿನಂತಿಸಿದರು.
ಮನವಿಗೆ ಸ್ಪಂದಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಈಗಾಗಲೇ ಬರ ಪರಿಹಾರ, ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ, ಜಲಾಶಯಗಳ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆಯಲಾಗಿದೆ. ಬರ ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಸ್ಥಳೀಯ ಕುಡಿಯುವ ನೀರಿನ ಸಮಸ್ಯೆ, ಜಾನುವಾರಗಳಿಗೆ ಮೇವಿನ ಸಮಸ್ಯೆ, ಕಬ್ಬು ಬೆಳೆ ಬಾಧಿಸುತ್ತಿರುವ ಗೊಣ್ಣೆಹುಳುವಿನ ರೋಗ ತಡೆಗಟ್ಟಲು ಕೃಷಿ ಇಲಾಖೆ ವತಿಯಿಂದ ರೈತರಿಗೆ ಹೇಗೆ
ಸಹಾಯಮಾಡಬಹುದು ಎಂಬ ವಿಚಾರಗಳ ಕುರಿತು ಚರ್ಚಿಸಲಾಗಿದೆ.
ಮನವಿಯಲ್ಲಿ ಉಲ್ಲೇಖಿಸಿರುವ ಸಲಹೆಗಳನ್ನು ಪರಿಗಣಿಸಿ ಮುಂಬರುವ ದಿನಗಳಲ್ಲಿ ಸ್ಥಳೀಯ ಸಂಘ-ಸಂಸ್ಥೆ, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆಕೊಂಡು ಬರ ಎದುರಿಸುವ ಎಲ್ಲ ಸಿದ್ಧತೆ ಸರ್ಕಾರ ಮಾಡಿಕೊಳ್ಳಲಿದೆ ಎಂದು ಭರವಸೆ ನೀಡಿದರು.
Laxmi News 24×7