ಬೆಂಗಳೂರು,ಫೆ.20-ಕೆಪಿಸಿಸಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಕ್ರಿಯೆಗಳನ್ನು ಆರಂಭಿಸಿರುವ ಕಾಂಗ್ರೆಸ್ ವರಿಷ್ಠರು ಹಂತ ಹಂತವಾಗಿ ರಾಜ್ಯದ ನಾಯಕರುಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ನಿನ್ನೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸೋನಿಯಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭಕ್ತ ಚರಣದಾಸ್ ಮತ್ತು ಮಧುಸೂದನ ಮಿಸ್ತ್ರಿ ವರದಿಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಡ ಹೇರಿದರು. ಆ ವರದಿಯ ಪ್ರಕಾರ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಸಿದ್ದರಾಮಯ್ಯನವರಲ್ಲಿಯೇ ಉಳಿಸಿ, ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಬೇರ್ಪಡಿಸಿ, ಈ ಸ್ಥಾನವನ್ನು ಬೇರೆ ನಾಯಕರಿಗೆ ನೀಡಬೇಕೆಂಬ ವಿಷಯ ಪ್ರಸ್ತಾಪಿಸಲಾಗಿದೆ.
ಆದರೆ ಈ ರೀತಿ ಸ್ಥಾನಗಳನ್ನು ಬೇರ್ಪಡಿಸಲು ಸಿದ್ದರಾಮಯ್ಯ ಮತ್ತು ಅವರ ತಂಡ ಬಲವಾದ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿದ್ದು, ರಾಜ್ಯ ನಾಯಕರ ಜೊತೆ ಸಮಾಲೋಚನೆಗೆ ಮುಂದಾಗಿದೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದ ಸೋನಿಯಾ ಇತ್ತೀಚೆಗೆ ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ಈಗ ಪಕ್ಷದ ಚಟುವಟಿಕೆಗಳತ್ತ ಗಮನಹರಿಸಿದ್ದಾರೆ.
ನಿನ್ನೆ ಮುನಿಯಪ್ಪನವರ ಭೇಟಿ ಬಳಿಕ ಇಂದು ದಿನೇಶ್ ಗುಂಡೂರಾವ್ ಅವರಿಗೆ ಚರ್ಚೆಗೆ ಅವಕಾಶ ನೀಡಿದ್ದಾರೆ. ಮುಂದೆ ಹಂತ ಹಂತವಾಗಿ ಪರಮೇಶ್ವರ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಅವರುಗಳ ಜೊತೆ ಸಮಾಲೋಚನೆ ನಡೆಯುವ ನಿರೀಕ್ಷೆಗಳಿವೆ.
ಹೀಗಾಗಿ ವಿಪಕ್ಷ ನಾಯಕ ಸ್ಥಾನದ ಗೊಂದಲ ನಿವಾರಣೆಗಳ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕಾತಿಯು ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಡಿ.ಕೆ.ಶಿವಕುಮಾರ್ ಅವರು ತೆರೆಮರೆಯಲ್ಲಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ಕಾನೂನಿನ ತೊಡಕುಗಳ ಬಗ್ಗೆ ಆತಂಕಗೊಂಡಿರುವ ಕಾಂಗ್ರೆಸ್ ಸದ್ಯಕ್ಕೆ ದಿನೇಶ್ ಗುಂಡೂರಾವ್ ಅವರನ್ನೇ ಮುಂದುವರೆಸಿದರೂ ಆಶ್ಚರ್ಯವಿಲ್ಲ ಎಂಬ ಮಾತುಗಳು ಕೇಳಿಬಂದಿವೆ.ಒಟ್ಟಿನಲ್ಲಿ ಇಂದು ದಿನೇಶ್ ಗುಂಡೂರಾವ್ ಅವರ ವರಿಷ್ಠರ ಭೇಟಿ ಯಾವ ರೀತಿಯ ಫಲ ನೀಡಲಿವೆ ಎಂದು ಕಾದುನೋಡಬೇಕಾಗಿದೆ.
Laxmi News 24×7