Breaking News

ಕೆಪಿಎಸ್‌ಸಿ ಅಕ್ರಮ: ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹ

Spread the love

ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಶಿವಮೊಗ್ಗದ  ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಟ್ರಸ್ಟ್ ಪದಾಧಿಕಾರಿಗಳು, 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 40 ಲಕ್ಷದಿಂದ 80 ಲಕ್ಷ ರೂ.ವರೆಗೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿಯ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ವಿಚಾರಣಾ ಸಮಿತಿ ರಚನೆ ಮಾಡಲಾಗಿದೆ. ಆದರೆ ಇದು ಕೇವಲ ಆರೋಪಗಳಿಂದ ಮುಕ್ತರಾಗುವ ಒಳಸಂಚು ಎಂಬ ಅನುಮಾನ ವ್ಯಕ್ತಪಡಿಸಿರುವ ಅವರು, ಯಾವುದೇ ಕಾರಣಕ್ಕೂ ಆಂತರಿಕ ವಿಚಾರಣಾ ಸಮಿತಿಯನ್ನು ಮುಂದುವರಿಸದೆ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತುರ್ತು ತನಿಖೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ಉಪಸಮಿತಿ ತನಿಖಾ ವರದಿ ಬರುವವರೆಗೆ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಡೆ ನೀಡಿರುವುದು ಸ್ವಾಗತಾರ್ಹ ಎಂದು ಟ್ರಸ್ಟ್ ಹೇಳಿದೆ. ಜೊತೆಗೆ, ಕೆಪಿಎಸ್‌ಸಿಯ ಮಾಜಿ ಅಧ್ಯಕ್ಷ ಶಿವಶಂಕರ್ ಎಸ್. ಸಾಹುಕಾರ್ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ ದಾಖಲಾಗಿದ್ದು, ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಮನವಿಯಲ್ಲಿ, NEET ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿ, ಕೆಪಿಎಸ್‌ಸಿಯಲ್ಲೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬರುತ್ತಿವೆ ಎಂದು ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೊ ಸಂಭಾಷಣೆಗಳು ಕೂಡ ಸೋರಿಕೆಯಾಗಿದ್ದು, ಇದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿ ಕೈಮೀರುವ ಮುನ್ನವೇ ಸರ್ಕಾರ ಕೆಪಿಎಸ್‌ಸಿ ಅಕ್ರಮದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕು ಎಂದು ಟ್ರಸ್ಟ್ ಮನವಿಯಲ್ಲಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಹೆಚ್.ಎಂ. ಸಂಗಯ್ಯ, ಆಲಿಂಖಾನ್, ಕೋಡ್ಲು ಶ್ರೀಧರ್, ಬಸವರಾಜ್ ಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವೇಶ್ಯಾವಾಟಿಕೆ ಜಾಲ ಭೇದಿಸಿದ ಅಥಣಿ ಪೊಲೀಸರು; ಇಬ್ಬರು ಅರೆಸ್ಟ್

Spread the loveಚಿಕ್ಕೋಡಿ: ಬೆಳಗಾವಿ  ಜಿಲ್ಲೆಯ ಅಥಣಿ ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿರುವ ವೆಂಕಟೇಶ್ವರ ಲಾಡ್ಜ್ ಮೇಲೆ ಅಥಣಿ ವೃತ್ತದ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ