ಬೆಂಗಳೂರು: ಕೆಪಿಎಸ್ಸಿ ಹಗರಣದ ಪರೀಕ್ಷಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಆದ ಆನ್ಯಾಯ ಖಂಡಿಸಿ ಮುಖ್ಯಮಂತ್ರಿ ಅವರ ಅಧಿಕೃತ ಗೃಹ ಕಚೇರಿ ‘ಕೃಷ್ಣಾ’ಗೆ ಮುತ್ತಿಗೆ ಹಾಕಲು ಎಬಿವಿಪಿ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಯತ್ನಿಸಿದ್ದಾರೆ.
2 ತಂಡಗಳಲ್ಲಿ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ‘ಕೃಷ್ಣಾ’ ಕಚೇರಿ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ಕೆಲಕಾಲ ಗಲಿಬಿಲಿ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರನ್ನ ಪೊಲೀಸರು ಎಳೆದೊಯ್ದು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಿಂದ ‘ಕೃಷ್ಣಾ’ ಕಚೇರಿ ಮುಂಭಾಗದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿದೆ. ಎರಡು ತಂಡಗಳಿಂದ ಮುತ್ತಿಗೆ ಯತ್ನ ನಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಗೆ ಪೀಕಲಾಟ ಎದುರಾಯಿತು.
ಕೆಪಿಎಸ್ಸಿ ಹಗರಣದ ಕುರಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಬಿವಿಪಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
Laxmi News 24×7