ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಶ್ನಿಸಿ ಕ್ಷುಲ್ಲಕ ಅರ್ಜಿ ಸಲ್ಲಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮೂಲದ ವ್ಯಕ್ತಿಯೊಬ್ಬರಿಗೆ ಹೈಕೋರ್ಟ್ ಬರೋಬ್ಬರಿ 5 ಲಕ್ಷ ರೂ. ದಂಡ ಹಾಕಿದೆ.
ಅರ್ಜಿದಾರರು ಸತ್ಯಾಂಶವನ್ನು ಬಚ್ಚಿಟ್ಟು, ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳುವ ಮಾಡಿದ್ದಲ್ಲದೆ, ನ್ಯಾಯಾಂಗದ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಇದನ್ನು ಸರ್ವತಃ ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಯತ್ನಗಳನ್ನು ನಿರ್ದಾಕ್ಷಿಣ್ಯವಾಗಿ ಮತ್ತು ಕಠೀಣಾತಿ ಕಠಿಣ ರೀತಿಯಲ್ಲಿ ಹತ್ತಿಕ್ಕಲಾಗುವುದು ಎಂದು ಹೈಕೋರ್ಟ್ ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ನಿವಾಸಿ ಪಿ. ಮೋಹನ್ ಚಂದ್ರ ದಂಡ ಹಾಕಿಸಿಕೊಂಡ ವ್ಯಕ್ತಿ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮೋಹನ್ ಚಂದ್ರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿದಾರರಿಗೆ 5 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಅರ್ಜಿದಾರರು 5 ಲಕ್ಷ ರೂ. ದಂಡದ ಮೊತ್ತವನ್ನು ಎರಡು ತಿಂಗಳಲ್ಲಿ ಬೆಂಗಳೂರು ವಕೀಲರ ಸಂಘಕ್ಕೆ ಪಾವತಿಸಬೇಕು ಎಂದು ಕೋರ್ಟ್ ಆದೇಶಿಸಿದೆ.