ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, 3.26 ಕೋಟಿ ರೂ. ಸಂಗ್ರಹವಾಗಿದೆ. ಇದು ಕಳೆದ 35 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಎಂಬುದು ಗಮನಾರ್ಹ.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ರಾತ್ರಿ 10ರ ತನಕವೂ ಹುಂಡಿ ಎಣಿಕೆ ನಡೆದಿತ್ತು.
ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, “ಅಮಾವಾಸ್ಯೆ, ಸರ್ಕಾರಿ ರಜಾ ದಿನ, ಯುಗಾದಿ ಜಾತ್ರೆ, ವಿವಿಧ ಮಹೋತ್ಸವಗಳೂ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 3.2 ಕೋಟಿ ನಗದು, 47 ಗ್ರಾಂ ಚಿನ್ನ ಹಾಗೂ 2.2 ಕೆ.ಜಿ ಬೆಳ್ಳಿಯ ವಸ್ತುಗಳು ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ” ಎಂದು ತಿಳಿಸಿದರು.
ಇದಲ್ಲದೆ ಹುಂಡಿಯಿಂದ 5.9 ಲಕ್ಷ ಹಣ, 11 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 20 ನೋಟುಗಳು ಸಿಕ್ಕಿವೆ ಎಂದು ಅವರು ಮಾಹಿತಿ ನೀಡಿದರು.
ಕಳೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ವೇಳೆ 3.18 ಕೋಟಿ ರೂ ಸಂಗ್ರಹವಾಗಿದ್ದು, ಇದುವರೆಗಿನ ಹುಂಡಿ ಎಣಿಕೆಯ ದಾಖಲೆಯ ಮೊತ್ತವಾಗಿತ್ತು. ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಹೆಚ್ಚಿನ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಬೆಟ್ಟದ ಇತಿಹಾಸದಲ್ಲೇ ಈ ಬಾರಿ ದಾಖಲೆಯ ಮೊತ್ತ ಸಂಗ್ರಹವಾಗಿದೆ ಎಂದು ಅವರು ಹೇಳಿದರು.
Laxmi News 24×7