ಬೆಂಗಳೂರು, ಮೇ 29: ರಾಜ್ಯ ಸರ್ಕಾರ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ, ದುಬಾರಿ ಬೆಲೆಗೆ ಮಾರುತ್ತಿರುವ ಹಗರಣದ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಮಾಧ್ಯಮಗಳ ಮಾತನಾಡಿದ ಅವರು, “ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು ಗುರಿಯಾಗಿಸಿ ಟೀಕೆ ಮಾಡಿದ್ದರು. ಆದರೆ ಈ ಹಗರಣಕ್ಕೆ ಸಂಬಂಧಿಸಿದಂತೆ ಈಗ ಬಂಧನ ಆಗಿರುವವರು ಯಾರು ಎಂಬುದನ್ನು ಅವರೇ ಹೇಳಬೇಕು” ಎಂದು ಟೀಕಿಸಿದರು.
ಮಾಧ್ಯಮಗಳಲ್ಲಿ ತೋರಿರುವಂತೆ, ಸರ್ಕಾರದಿಂದ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿ ಅದನ್ನು 900 ರಿಂದ 1200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆಡಳಿತ ಪಕ್ಷದವರು ಶಾಮೀಲಾಗಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು. ಪ್ರಕರಣದ ಬಗ್ಗೆ ದೂರು ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ರಾಜ್ಯದ ಜನರ ಪರವಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಕೊರೊನಾ ಸಂದರ್ಭ ಮಕ್ಕಳ ಸುರಕ್ಷತೆ ಕುರಿತು ಮಾತನಾಡಿದ ಅವರು, ನವೆಂಬರ್ 30 ರಂದು 2ನೇ ಅಲೆ ಬಗ್ಗೆ ಎಚ್ಚರಿಕೆ ಕೊಟ್ಟಿದ್ದರೂ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ. 3ನೇ ಅಲೆ ಮಕ್ಕಳಿಗೆ ಅಪಾಯವಿದೆ ಎನ್ನುತ್ತಿದ್ದಾರೆ. ಈ ಕುರಿತು ಸರ್ಕಾರ ಸಿದ್ಧತೆ ಮಾಡಿಕೊಂಡಿದೆಯೇ ಎಂದು ಪ್ರಶ್ನಿಸಿದರು. ಮಕ್ಕಳ ರಕ್ಷಣೆ ಸಂಬಂಧ ಕಾಂಗ್ರೆಸ್ ಮಹಿಳಾ ಘಟಕ ಕಾರ್ಯಕ್ರಮ ರೂಪಿಸಿದೆ. ರಾಜ್ಯದ ಎಲ್ಲ ತಾಲೂಕುಗಳಲ್ಲೂ ಮಕ್ಕಳ ರಕ್ಷಣೆಗಾಗಿ ಮೆಡಿಕಲ್ ಕಿಟ್ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಎಲ್ಲ ಕ್ಷೇತ್ರಗಳಲ್ಲೂ ಕಾರ್ಯಕ್ರಮ: ಪಕ್ಷದ ರಾಷ್ಟ್ರೀಯ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು 9 ದಿನಗಳ ಕಾಲ ನಿರಂತರವಾಗಿ ಈ ರಾಜ್ಯದಲ್ಲಿ ಪಕ್ಷದ ಪ್ರತಿಯೊಬ್ಬ ಶಾಸಕ, ಸಂಸದರು, ಮಾಜಿ ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಜತೆ ಚರ್ಚೆ ಮಾಡಿದರು. ಈ ವೇಳೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲು ನಾಯಕರಿಗೆ ಸೂಚನೆ ಕೊಟ್ಟಿದ್ದೇವೆ ಎಂದರು.