ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ 2 ಸ್ಥಾನಗಳ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಹಾಗೂ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಸ್ಪರ್ಧಿಸುತ್ತಿದ್ದು, ಪಕ್ಷೇತರರಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದರೂ ಇನ್ನೂ ಖಚಿತವಾಗಿಲ್ಲ.
ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಎರಡೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಂದು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಕಣಕ್ಕಿಳಿಯುವುದು ನಿಜವಾದರೆ ಅವರೂ ಅಂದೇ ನಾಮಪತ್ರ ಸಲ್ಲಿಸುವರು.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎರಡೂ ಪಕ್ಷಗಳ ರಾಜ್ಯ ನಾಯಕರು, ಸ್ಥಳೀಯ ಶಾಸಕರು, ಗಣ್ಯರು ಪಾಲ್ಗೊಳ್ಳಲಿದ್ದು, ಬೆಳಗಾವಿಯಲ್ಲಿ ಅಂದು ರಾಜಕೀಯ ರಂಗೇರಲಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಬ್ಬರನ್ನು ಮಾತ್ರ ಕಣಕ್ಕಿಳಿಸುವ ಮೂಲಕ ತಲಾ ಒಂದೊಂದು ಸ್ಥಾನಗಳನ್ನು ಹಂಚಿಕೊಂಡಿವೆ. 2 ಸ್ಥಾನಗಳಿರುವುದರಿಂದ ಗೊಂದಲ ಮತ್ತು ಅನಗತ್ಯ ಶಕ್ತಿ ವ್ಯಯ ಬೇಡ ಎನ್ನುವ ತೀರ್ಮಾನಕ್ಕೆ ಎರಡೂ ಪಕ್ಷಗಳು ಬಂದಂತಿದೆ.
ಆದರೆ ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಕಣಕ್ಕಿಳಿದರೆ ಎರಡೂ ಪಕ್ಷಗಳಿಗೆ ತಲೆನೋವಾಗುವುದು ಖಚಿತ. ಸಧ್ಯ ಲಖನ್ ಜಾರಕಿಹೊಳಿ ಬಿಜೆಪಿಯಲ್ಲಿರುವುದರಿಂದ ಬಿಜೆಪಿಯ ಮತಗಳು ಹೆಚ್ಚಿನ ಪ್ರಮಾಣದಲ್ಲಿ ವಿಭಜನೆಯಾಗಿ ಅವರಿಗೆ ಹೋಗುವ ಸಾಧ್ಯತೆ ಇದೆ. ಹಾಗಾದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೊದಲ ಪ್ರಾಶಸ್ತ್ಯದ ಮತದಲ್ಲಿ ಗೆಲ್ಲುವುದು ಕಷ್ಟವಾಗಬಹುದು ಅಥವಾ ಬಿಜೆಪಿಗೆ ಸೋಲಿನ ಭೀತಿಯೂ ಉಂಟಾಗಬಹುದು