ಬೆಂಗಳೂರು, ಏಪ್ರಿಲ್. 20: ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ಚುನಾವಣಾ ಆಯೋಗ ಹಲವು ರೀತಿಯಲ್ಲಿ ಸಿದ್ಧವಾಗುತ್ತದೆ. ಮತ ಚಲಾಯಿಸಲು ನಿರಾಸಕ್ತಿ ತೋರಿಸಲುವ ಮತದಾರರನ್ನು ಜನರನ್ನು ಮತಗಟ್ಟೆಗಳಿಗೆ ಕರೆತರಲು ಸಾಕಷ್ಟು ಕಷ್ಟ ಪಡುತ್ತಿದೆ.
ಇದೇ ನಿಟ್ಟಿನಲ್ಲಿ ಚುನಾವಣಾ ಆಯೋಗ “ನಮ್ಮ ನಡೆ ಮತಗಟ್ಟೆ ಕಡೆಗೆ” ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನವು ಎರಡು ಹಂತಗಳಲ್ಲಿ ನಡೆಯಲಿದೆ ದಿನಾಂಕ 26.04.2024 ಹಾಗೂ 07.05.2024 ಗಳಂದು ನಡೆಯಲಿದೆ. ಈ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ಭಾರತ ಚುನಾವಣಾ ಆಯೋಗ ಸೂಚಿಸಿದೆ.
ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ, “ನಮ್ಮ ನಡೆ ಮತಗಟ್ಟೆ ಕಡೆಗೆ” ಎಂಬ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಮೊದಲ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ: 21.04.2024 ಹಾಗೂ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ: 28.04.2024 ರಂದು ಚುನಾವಣಾ ಧ್ವಜಾರೋಹಣ ಕಾರ್ಯಕ್ರಮವನ್ನು ಬೆಳಗ್ಗೆ 08:00 ಗಂಟೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ.