ಬೆಂಗಳೂರು: ಕಾಫಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ಕಾರಣ ಶಾಕೀರ್ ಅಹ್ಮದ್(28) ಎಂಬ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 1 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದ ಶಾಕೀರ್ ಅಹ್ಮದ್ ಜುಲೈ 13ರಿಂದ ನಾಪತ್ತೆಯಾಗಿದ್ದಾರೆಂದು ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29ರಿಂದ ವಜ್ರೇಶ್ವರಿ ಲಾಡ್ಜ್ನಲ್ಲಿ ತಂಗಿದ್ದ ಶಾಕೀರ್, ಇಂದು ಮಧ್ಯಾಹ್ನ ಊಟಕ್ಕೆ ಹೊರ ಬರದಿದ್ದಾಗ ಲಾಡ್ಜ್ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದ್ದರು. ನೇಣುಬಿಗಿದ ಸ್ಥಿತಿಯಲ್ಲಿ ಶಾಕೀರ್ ಅಹ್ಮದ್ ಮೃತದೇಹ ಪತ್ತೆಯಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಪತಿಯಿಂದ ಪತ್ನಿಯ ಕೊಲೆ
ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಪತಿ ಪತ್ನಿಯನ್ನು ಹತ್ಯೆಗೈದ ಘಟನೆ ಬೆಂಗಳೂರಿನ ಚಂದ್ರಾಲೇಔಟ್ನಲ್ಲಿ ನಡೆದಿದೆ. ಸೈಯದ್ ಎಂಬಾತನೇ ಚಾಕುವಿನಿಂದ ಪತ್ನಿಯನ್ನು ಇರಿದು ಕೊಂದ ಪತಿಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ದಂಪತಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯಗೊಂಡಿದೆ. ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೆಲಮಂಗಲ ಟೌನ್ ಠಾಣೆ ಪೊಲೀಸರಿಂದ ಇಬ್ಬರು ವಶಕ್ಕೆ
ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ಇಬ್ಬರನ್ನು ನೆಲಮಂಗಲ ಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ತಹಶೀಲ್ದಾರ್ ಕೆ.ಮಂಜುನಾಥ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ತೆರವು ಕಾಱಚರಣೆಗೆ ಬಜರಂಗ ದಳದಿಂದ ವಿರೋಧ ವ್ಯಕ್ತಪಡಿಸಿದ ಕಾರಣ ಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.