ತುಮಕೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡರು. ಜತೆಗೆ ಮಠದ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಠದಲ್ಲಿಯೇ ಪ್ರಸಾದ ಸೇವಿಸಿದರು. ಇಂದೇ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಈಮುನ್ನ ತಿಳಿಸಿದ್ದ ಅವರು ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಹಿಂದುರಿಗಿದ ನಂತರ ಖಾತೆ ಹಂಚಿಕೆ ಮಾಡುವುದಾಗಿ ಸುದ್ದಿಗಾರರಿಗೆ ತಿಳಿಸಿದರು. ಸಿದ್ದಗಂಗಾ ಮಠಕ್ಕೆ ಬಂದಾಗಲೆಲ್ಲ ಪ್ರೇರಣೆ ಪಡೆದುಕೊಂಡಿದ್ದೇನೆ. ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಮಠಕ್ಕೆ ಬಂದಿದ್ದೇನೆ. ನಾಡಿನ ಸೇವೆಮಾಡಲು ಶ್ರೀಗಳ ಆಶೀರ್ವಾದ ಪಡೆದುಕೊಂಡೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ,ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ – ಸಿಎಂ ಬೊಮ್ಮಾಯಿ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಸೌಹಾರ್ದಯುತ ಮಾತುಕತೆ ನಡೆಸಿದರು. ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ, ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಲಾಯಿತು. ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ ಮಾತುಕತೆ ನಡೆಸಿದರು. ಉಭಯ ರಾಜ್ಯಗಳ ನಡುವಿನ ಅಂತರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ನವದೆಹಲಿಯಲ್ಲಿ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ಇದದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಸಹ ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ, ಜಲಸಂಪನ್ಮೂಲ ಇಲಾಖೆ ಎಸಿಎಸ್ ರಾಕೇಶ್ ಸಿಂಗ್ ಉಪಸ್ಥಿತರಿದ್ದರು. ಸಭೆಯಲ್ಲಿ ಕರ್ನಾಟಕ – ಮಹಾರಾಷ್ಟ್ರ ನಡುವಿನ ಜಲ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.