ಮೈಸೂರು : ಬಿಜೆಪಿ ಸರ್ಕಾರಕ್ಕೆ ಬದ್ಧತೆ ಇದ್ದರೆ ತಕ್ಷಣ ಮೇಕೆದಾಟು ಆಣೆಕಟ್ಟು ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಪತ್ರ ಬರೆಯುವುದನ್ನು ಬಿಟ್ಟು, ಕೇಂದ್ರ ಜಲ ನ್ಯಾಯಮಂಡಳಿ ಬಳಿ ಹೋಗಿ ಅನುಮತಿ ಪಡೆದು, ನಂತರ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕೆಂದು ಆಗ್ರಹಿಸಿದರು.
ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾತಿ ಗಣತಿ ವರದಿ ಪಡೆಯುತ್ತದೆ. ಜಾತಿ ಗಣತಿ ಮಾಡಿದರೆ ಜಾತಿಗಳ ನಿಖರ ವಿವರ ಲಭಿಸುತ್ತದೆ. ಆದರ ಆಧಾರದ ಮೇಲೆ ಸಮಾಜದಲ್ಲಿನ ಬಡವರಿಗೆ ವಿಶೇಷ ಯೋಜನೆಗಳನ್ನು ನೀಡಬಹುದು. ರಾಜ್ಯದಲ್ಲಿ ಜಾತಿ ಗಣತಿ ಆಗಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಸಚಿವ ಆನಂದ್ ಸಿಂಗ್ ರಾಜೀನಾಮೆ ವಿಚಾರ ಕುರಿತು ಪ್ರತಿಕ್ರಿಯಿಸಿದ್ದ ಅವರು, ಸಂಪುಟ ರಚನೆ ವೇಳೆಯೇ ಅಸಮಾಧಾನ ಹೊಗೆಯಾಡುತ್ತಿದ್ದು, ಮುಂದೆ ಅದು ಜಾಲ್ವೆಯಾಗಿ ಸ್ಫೋಟಗೊಳ್ಳುತ್ತದೆ ಎಂದು ತಿಳಿಸಿದರು.
ಸಾಮಾಜಿಕ ನ್ಯಾಯದ ಮೇಲೆ ಯಾರಿಗೆ ಗೌರವ ಇಲ್ಲವೋ ಅಂಥವರಿಂದ ಉತ್ತಮ ಆಡಳಿತ ನೀಡಲು ಹೇಗೆ ಸಾಧ್ಯ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.