ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳು ಆಗವುದಿಲ್ಲ ಎಂಬ ವಿಶ್ವಾಸವಿದೆ. ಅವರು ನೆರಳಾಗಿದ್ದರೆ ಯಡಿ ಯೂರಪ್ಪ ಅವರು ನೇಮಕ ಮಾಡಿದ ಸಿಬಂದಿಯೇ ಮುಂದುವರಿಯುತ್ತಿದ್ದರು. ಆದರೆ ವಿಜಯೇಂದ್ರ ಅವರು ಈಗಲೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಳಿಕ ಯಡಿಯೂರಪ್ಪ ಒತ್ತಡದಿಂದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ. ಅವರು ಅವಧಿ ಪೂರ್ಣಗೊಳಿಸಲಿ ಎಂದು ಚಾಮುಂಡೇಶ್ವರಿಗೆ ಬೇಡಿಕೊಳ್ಳುವೆ. ಮುಖ್ಯಮಂತ್ರಿಯವರಿಗೆ ಮೂರ್ನಾಲ್ಕು ತಿಂಗಳು ಕಾಲಾವಕಾಶ ನೀಡಬೇಕು. ಅನಂತರ ಅವರ ಆಡಳಿತ ನಿರ್ವಹಣೆ ಬಗ್ಗೆ ವ್ಯಾಖ್ಯಾನಿಸಬಹುದು ಎಂದರು.
ಜಗದೀಶ ಶೆಟ್ಟರ್ ತ್ಯಾಗದ ಪ್ರತಿರೂಪ ವಾಗಿ ಬಸವರಾಜ ಬೊಮ್ಮಾಯಿ ಸಿಎಂ ಆಗಿ ದ್ದಾರೆ. ಯಡಿಯೂರಪ್ಪ ಪುತ್ರ ವಿಜಯೇಂದ್ರ ಪ್ರಸ್ತುತ ಸರಕಾರದಲ್ಲೂ ಸ್ವಲ್ಪ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾವೇರಿ ನಿವಾಸದಲ್ಲಿನ ಕೆಲವು ದೃಶ್ಯಗಳ ಬಗ್ಗೆ ಮಾಹಿತಿ ಇದೆ. ಇನ್ನೊಂದು ವಾರ ತಡೆಯಿರಿ, ಎಲ್ಲವನ್ನೂ ಹೇಳುವೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಆಕಾಂಕ್ಷಿಯಲ್ಲ: ವಿಜಯೇಂದ್ರ :
ಕಲಬುರಗಿ: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಅಲ್ಲದೆ, ಉಪ ಮುಖ್ಯಮಂತ್ರಿ ಹುದ್ದೆ ಸಹಿತ ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸದ್ಯ ಬಿಜೆಪಿ ಉಪಾಧ್ಯಕ್ಷನಾಗಿದ್ದೇನೆ. ನನಗೆ ಸಚಿವ ಸ್ಥಾನ ಕೊಡಿಸಲು ಯಡಿಯೂರಪ್ಪ ಒತ್ತಡ ಹೇರಿಲ್ಲ. ನನಗೆ ಹೆಚ್ಚಿನ ವಯಸ್ಸಾಗಿಲ್ಲ. ಈಗ 45 ವರ್ಷಗಳಾಗಿವೆ. ಮುಂದೆ ಪಕ್ಷದಲ್ಲಿ ಉನ್ನತ ಹುದ್ದೆಗಳು ದೊರೆಯಬಹುದು. ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ರಾಜ್ಯದಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದರು.
ಬೊಮ್ಮಾಯಿ ಸಂಪುಟದಲ್ಲಿ ಮುಂದಿನ ದಿನಗಳಲ್ಲಿ ಅವಕಾಶ ಸಿಗುವ ನಿರೀಕ್ಷೆಯಿದೆ. ದಿಲ್ಲಿಯಲ್ಲಿ ಬಿಜೆಪಿ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹಿತ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಮಧ್ಯ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ಸಿಗುವ ಭರವಸೆ ಇದೆ .-ರೇಣುಕಾಚಾರ್ಯ, ಹೊನ್ನಾಳಿ ಶಾಸಕ