Breaking News
Home / ರಾಜಕೀಯ / ಅಫ್ಘಾನಿಸ್ತಾನದಿಂದ ಬರಲು ಇಚ್ಛಿಸುವ ಹಿಂದೂಗಳಿಗೆ ಆಶ್ರಯ: ಪ್ರಧಾನಿ ಮೋದಿ

ಅಫ್ಘಾನಿಸ್ತಾನದಿಂದ ಬರಲು ಇಚ್ಛಿಸುವ ಹಿಂದೂಗಳಿಗೆ ಆಶ್ರಯ: ಪ್ರಧಾನಿ ಮೋದಿ

Spread the love

ನವದೆಹಲಿ, ಆಗಸ್ಟ್ 18: ಭಾರತಕ್ಕೆ ಬರಲು ಇಚ್ಛಿಸುವ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಸಿಖ್ ಹಾಗೂ ಹಿಂದೂಗಳಿಗೆ ಆಶ್ರಯ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ತಾಲಿಬಾನ್ ಅಟ್ಟಹಾಸದಿಂದ ಅಫ್ಘಾನಿಸ್ತಾನ ನಲುಗುತ್ತಿದ್ದು, ಅಲ್ಲಿನ ಭಾರತೀಯರ ಸಹಾಯಕ್ಕೆ ಪ್ರಧಾನಿ ಮೋದಿ ಮುಂದಾಗಿದ್ದಾರೆ. ಆಫ್ಘನ್‌ನಲ್ಲಿ ಇರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು ಎಂದು ವಿದೇಶಾಂಗ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಹಾಯಕ್ಕಾಗಿ ಭಾರತದತ್ತ ನೋಡುತ್ತಿರುವ ನಿರಾಶ್ರಿತರಿಗೆ ಎಲ್ಲ ನೆರವು ನೀಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದಿದ್ದಾರೆ.

ನಮ್ಮ ಕಚೇರಿ ಮುಚ್ಚಿದೆ, ಜನರನ್ನು ಕೈಬಿಟ್ಟಿಲ್ಲ

ಕಾಬೂಲ್‌ನ ನಮ್ಮ ಕಚೇರಿ ಮುಚ್ಚಿರಬಹುದು, ಆದರೆ ತಾವು ಅಫ್ಘಾನಿಸ್ತಾನದ ಜನರನ್ನು ಕೈಬಿಟ್ಟಿದ್ದೇವೆ ಎಂದರ್ಥವಲ್ಲ. ಅವರೊಂದಿಗೆ ನಮ್ಮ ಸಂವಹನವನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಆಫ್ಘಾನಿಸ್ತಾನದ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್ ಹೇಳಿದ್ದಾರೆ.

ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಮತ್ತು ಇತರ ಭಾರತೀಯರೊಂದಿಗೆ ಭಾರತಕ್ಕೆ ಮರಳಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಟಂಡನ್, ಪರಿಸ್ಥಿತಿ ತುಂಬಾ ಬದಲಾಗುತ್ತಿರುವುದರಿಂದ ಮುಂದಿನ ನಡೆಯನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಟಂಡನ್ ಹೇಳಿದ್ದಾರೆ.

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭಾರತೀಯರ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಅವರು, ಅಲ್ಲಿ ಇನ್ನೂ ಕೆಲವು ಭಾರತೀಯರು ಇದ್ದಾರೆ ಮತ್ತು ಅಲ್ಲಿಗೆ ಏರ್‌ ಇಂಡಿಯಾ ತನ್ನ ವಾಣಿಜ್ಯ ಸೇವೆಗಳನ್ನು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿಯೂ ತಮ್ಮನ್ನು ಸುರಕ್ಷಿತವಾಗಿ ಮರಳಿ ಕರೆತಂದಿದ್ದಕ್ಕಾಗಿ ಭಾರತೀಯ ವಾಯುಪಡೆಗೆ ರಾಯಭಾರಿ ಟಂಡನ್ ಧನ್ಯವಾದ ತಿಳಿಸಿದರು.

ತಾಲಿಬಾನ್ ಉಗ್ರರು ಸ್ವಾಧೀನಪಡಿಸಿಕೊಂಡ ನಂತರ ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಟಂಡನ್, ಪರಿಸ್ಥಿತಿ ತುಂಬಾ ಜಟಿಲವಾಗಿದೆ ಮತ್ತು ಈಗ ಪರಿಸ್ಥಿತಿ ಸಾಕಷ್ಟು ಅಪಾಯಕಾರಿಯಾಗಿದೆ ಎಂದರು.

ಕಾಬೂಲ್ ವಿಮಾನ ನಿಲ್ದಾಣದಲ್ಲಿನ ಪರಿಸ್ಥಿತಿಗಳಿಂದಾಗಿ ಏರ್ ಇಂಡಿಯಾ ತನ್ನ ವಾಣಿಜ್ಯ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಯಿತು. ಆದರೆ, ಅಲ್ಲಿ ಯಾರಾದರೂ ಭಾರತೀಯರು ಸಿಲುಕಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಇದಕ್ಕಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸಹಾಯ ಕೇಂದ್ರ ತೆರೆದಿದೆ. ಕಾಬೂಲ್‌ನಲ್ಲಿ ಇನ್ನೂ ಕೆಲ ಭಾರತೀಯರು ಉಳಿದುಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸೇವೆಗಳು ಪುನರಾರಂಭವಾದಾಗ ಅವರನ್ನು ಮರಳಿ ತರಲಾಗುವುದು ಎಂದರು.

ಅನೇಕ ಭಾರತೀಯರು ತಮ್ಮನ್ನು ನೋಂದಾಯಿಸಿಕೊಳ್ಳದಿರುವುದು ಈಗ ಸಮಸ್ಯೆಯಾಗಿದೆ. ವಿಶೇಷವಾಗಿ ಅಫ್ಘಾನಿಸ್ತಾನದಂತಹ ದೇಶಗಳಲ್ಲಿ ರಾಜಕೀಯ ಪರಿಸ್ಥಿತಿಯು ಬದಲಾಗುವ ಸಾಧ್ಯತೆಗಳಿರುವುದರಿಂದ ಭಾರತೀಯ ನಾಗರಿಕರು ತಮ್ಮನ್ನು ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳುವುದು ಮುಖ್ಯ. ಇಂತಹ ಸಂದರ್ಭದಲ್ಲಿ ಅವರನ್ನು ಅಲ್ಲಿಂದ ಹೊರತರಲು ನೆರವಾಗುತ್ತದೆ ಎಂದರು.

ಮೋದಿ ತುರ್ತು ಸಭೆ

ಅಫ್ಘಾನಿಸ್ತಾನವನ್ನು ತಾಲಿಬಾನ್‌ಗಳು ವಶಪಡಿಸಿಕೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ.

ತುರ್ತು ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್ ಸಭೆಯಲ್ಲಿ ಭಾಗಿಯಾಗಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ