ಬೆಳಗಾವಿ: ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿ ಕೇಂದ್ರವನ್ನಾಗಿ ಮಾಡಲು ಸರಕಾರ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೌಧವನ್ನು ಶಕ್ತಿಕೇಂದ್ರವನ್ನಾಗಿ ಮಾಡಲು ತಕ್ಷಣವೇ ಸಕ್ಕರೆ ಆಯುಕ್ತಾಲಯವನ್ನು ಬೆಳಗಾವಿಗೆ ಸ್ಥಳಾಂತರ ಮಾಡಲು ಆದೇಶ ನೀಡಲಾಗುವುದು ಎಂದು ಹೇಳಿದರು.
ಇದಲ್ಲದೆ ಮಹತ್ವದ ಸರಕಾರಿ ಕಚೇರಿಗಳನ್ನು ಸಹ ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡಲು ಅಗತ್ಯ ಕ್ರಮವಹಿಸಲಾಗುವದು ಎಂದರು.
ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಬ್ಲ್ಯಾಕ್ ಫಂಗಸ್ ಸೋಂಕಿತರು ಮನೆಗೆ ತೆರಳಿದ ಬಳಿಕವೂ ವಯಲ್ ಗಳನ್ನು ಪೂರೈಸಲು ಸರಕಾರ ನಿರ್ಧಾರ ಮಾಡಿದೆ ಎಂದ ಅವರು ಬಿಮ್ಸ್ ಆಸ್ಪತ್ರೆಗೆ ಮೂಲಸೌಕರ್ಯ ಒದಗಿಸಲು ತಂಡವನ್ನು ಕಳುಹಿಸಲಾಗುವುದು ಎಂದರು.