ಬೆಂಗಳೂರು: ಟಿ.ಎಂ. ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಮೊದಲ ವರದಿಯಲ್ಲಿನ ಶಿಫಾರಸುಗಳನ್ನು ನವೆಂಬರ್ 1ರಿಂದ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ಸಲಹಾ ಸಮಿತಿ ರಚಿಸಲಾಗುವುದು. ಸಮಿತಿಯ ಸಲಹೆಗಳ ಆಧಾರದಲ್ಲಿ ನ.1ರಿಂದಲೇ ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು’ ಎಂದರು.
ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.