ಬೆಂಗಳೂರು, ಸೆ. 01: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉದ್ದೇಶಿತ ರಾಜ್ಯ ಪ್ರವಾಸ ಬಿಜೆಪಿಯಲ್ಲಿ ಚರ್ಚೆ ಹುಟ್ಟುಹಾಕಿದೆ. ಅವರು ಮಾಡುವ ಪ್ರವಾಸದಿಂದ ಪಕ್ಷದ ಮೇಲೆ ಯಾವ ರೀತಿ ಪ್ರಭಾವ ಆಗಬಹುದು ಎಂಬುದನ್ನು ಹೈಕಮಾಂಡ್ ಗಮನಿಸುತ್ತಿದೆ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೈಸೂರಿನಲ್ಲಿ ಮಹತ್ವದ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಾಲ್ಕು ದಿನಗಳ ರಾಜ್ಯ ಪ್ರವಚಾಸದಲ್ಲಿರುವ ಅರುಣ್ ಸಿಂಗ್ ಇನ್ನೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ. ಪಕ್ಷ ಸಂಘಟನೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆಗೆ ಬಿಜೆಪಿ ಚುನಾವಣಾ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ವಿಚಾರದ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿದ್ದಾರೆ. ಜೆಡಿಎಸ್ ಜೊತೆಗೆ ಚುನಾವಣಾ ಮೈತ್ರಿಯನ್ನು ಮಾಡಿಕೊಳ್ಳುವ ಬಗ್ಗೆ ಅವರು ಪಕ್ಷದ ನಿಲುವನ್ನು ಪ್ರಕಟಿಸಿದ್ದಾರೆ.
ಜೆಡಿಎಸ್ ಜೊತೆಗೆ ಬಿಜೆಪಿ ಚುನಾವಣಾ ಮೈತ್ರಿ?
“ಜೆಡಿಎಸ್ ಪಕ್ಷವು ಮುಳುಗುತ್ತಿರುವ ಹಡಗು. ಯಾರೂ ಮುಳುಗುತ್ತಿರುವ ಹಡಗಿನ ಜೊತೆಗಿರುವ ಯೋಚನೆ ಮಾಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ಮುಂದಿನ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ. ಹೀಗಾಗಿ ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷದ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ರಾಜ್ಯ ಪ್ರವಾಸದ ಬಗ್ಗೆಯೂ ಬಿಜೆಪಿ ಹೈಕಮಾಂಡ್ ನಿಲುವನ್ನು ಅರುಣ್ ಸಿಂಗ್ ಬಹಿರಂಗ ಪಡಿಸಿದ್ದಾರೆ.
ಪಕ್ಷದ ನಿಲುವನ್ನು ಪ್ರಕಟಿಸಿದ ಅರುಣ್ ಸಿಂಗ್!
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜ್ಯದ ಅತ್ಯುನ್ನತ ನಾಯಕರು. ಅವರ ರಾಜ್ಯ ಪ್ರವಾಸದಿಂದ ಪಕ್ಷಕ್ಕೆ ಒಳಿತಾಗಲಿದೆ. ಹೀಗಾಗಿ ಅವರ ಪ್ರವಾಸದ ಕುರಿತು ಹೈಕಮಾಂಡ್ ಯಾವುದೇ ಅಡ ತಡೆ ಹಾಕಿಲ್ಲ. ಹಾಕುವುದೂ ಇಲ್ಲ. ಹೀಗಾಗಿ ಈ ಬಗ್ಗೆ ಹೆಚ್ಚಿನ ಚರ್ಚೆ ಅಗತ್ಯವಿಲ್ಲ. ಪಕ್ಷದ ನಿಲುವನ್ನು ನಾನು ಪ್ರಕಟಿಸಿದ್ದೇನೆ ಎಂದು ಅರುಣ್ ಸಿಂಗ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಜೊತೆಗೆ ರಾಜ್ಯದ ಹಿತಾಸಕ್ತಿಯನ್ನು ಬಿಜೆಪಿ ಕಾಯುತ್ತಿಲ್ಲ ಎಂಬ ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ.