ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈಅಲರ್ಟ್ ಘೋಷಿಸಲಾಗಿದೆ.
ಸೆ.5 ಮತ್ತು 6ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ ಜಿಲ್ಲೆಗಳಲ್ಲಿ ಸೆ.6ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಮುಂಗಾರು ಗುರುವಾರ ಕರಾವಳಿಯಲ್ಲಿ ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೋಟದಲ್ಲಿ 9 ಸೆಂ.ಮೀ., ಸಿದ್ದಾಪುರದಲ್ಲಿ 7 ಸೆಂ.ಮೀ., ಹಾವೇರಿಯಲ್ಲಿ 6 ಸೆಂ.ಮೀ., ಕಾರವಾರ, ಭಟ್ಕಳ, ಗೋಕರ್ಣ ಹಾಗೂ ಅಂಕೋಲಾದಲ್ಲಿ 5 ಸೆಂ.ಮೀ., ಆಗುಂಬೆಯಲ್ಲಿ 5 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಜಾನ್ಮನೆ, ಬೆಳ್ಳೇಕೇರಿ, ಕಾರ್ಕಳ, ತಾಳಗುಪ್ಪದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.