ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿಯಲ್ಲಿ ಚುನಾವಣೆಯಲ್ಲಿ ಪರಾಭವಗೊಂಡ 310 ಅಭ್ಯರ್ಥಿಗಳಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ.
ಪರಾಭವಗೊಂಡ ಎಲ್ಲ ಪಕ್ಷಗಳ ಅಭ್ಯರ್ಥಿಗಳು ಪ್ರತಿಭಟನೆ ಕೈಗೊಂಡು ಮರುಚುನಾವಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಚುನಾವಣೆ ನಡೆಸಲಾಗಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಮರುಚುನಾವಣೆ ನಡೆಸಬೇಕು. ನಡೆಸದಿದ್ದರೆ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತದಾನದ ವೇಳೆ ವಿವಿ ಪ್ಯಾಟ್ ಹಾಕದೇ ಚುನಾವಣೆ ನಡೆಸಲಾಗಿದೆ, ಮತ್ತು ಮತದಾರರ ಪಟ್ಟಿಯಲ್ಲಿ ಕೆಲವರ ಹೆಸರು ಮಾಯವಾಗಿ ಗೊಂದಲ ಸೃಷ್ಟಿಸಲಾಗಿದೆ ಪರಿಣಾಮ ಸಾಕಷ್ಟು ಮತದಾರರಿಗೆ ಮತದಾನ ಮಾಡಲು ಸಾಧ್ಯವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಸಾಕಷ್ಟು ಕಡೆ ಬೋಗಸ್ ಮತದಾನ ನಡೆದಿದೆ ಆದರೂ ಚುನಾವಣಾಧಿಕಾರಿಗಳು ಕ್ರಮಕೈಗೊಂಡಿಲ್ಲ. ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.