Breaking News

ಇಂಜಿನಿಯರಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ: ಸಚಿವ ಅಶ್ವತ್ಥನಾರಾಯಣ

Spread the love

ಬೆಂಗಳೂರು, ಸೆಪ್ಟಂಬರ್ 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್‌ಡೌನ್‌ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯಲ್ಲಿಯೂ ಸಹ ಚರ್ಚಿಸಿ, ಶುಲ್ಕ ಹೆಚ್ಚಳ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಿಇಟಿ ರ್ಯಾಂಕ್ ಮೂಲಕ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಸಹ ಕೌಶಲ ತರಬೇತಿ ಹೆಸರಿನಲ್ಲಿ ಶುಲ್ಕ ಪಡೆಯಲಾಗುತ್ತದೆ. ಆದರೆ, ಈ ಶುಲ್ಕ ವರ್ಷಕ್ಕೆ 20,000 ಮೀರಬಾರದು ಎಂದು ಖಾಸಗಿ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿದೆ ಎಂದರು

ವಿಟಿಯು ಕುಲಪತಿ ಸಮಿತಿ:

ಸರ್ಕಾರಿ ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ, ಶುಲ್ಕ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಗಳ ಕುರಿತು ನಿಗಾ ವಹಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ. ಕರಿಸಿದ್ದಪ್ಪ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲ ಇದ್ದರೂ ಸಹ ಸಮಿತಿಯ ಬಳಿ ಕೋರಿಕೆ ಸಲ್ಲಿಸಬಹುದು ಎಂದು ವಿವರಿಸಿದರು.

2020-21ನೇ ಸಾಲಿನಲ್ಲಿ 1.93 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 1,83,231 ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಕೋರ್ಸ್‌ಗೆ ರ್ಯಾಂಕ್ ನೀಡಲಾಗಿದೆ. ಕೃಷಿ ಕೋರ್ಸ್‌ಗೆ 1.52,518 ಅಭ್ಯರ್ಥಿಗಳು, 1,55,760 ಪಶು ಸಂಗೋಪನೆ, 1,55,910 ಆಯುಷ್ ಕೋರ್ಸ್ ಅಭ್ಯರ್ಥಿಗಳಿದ್ದಾರೆ. ಈ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಯುತ್ತದೆ.

ಈ ಮಧ್ಯೆ ಸೆ.26ರಂದು ಕಾಮೆಡ್-ಕೆ ಸಹ ತನ್ನ ಫಲಿತಾಂಶ ಪ್ರಕಟಿಸಿದೆ. ಇಲ್ಲಿ 44,111 ಅಭ್ಯರ್ಥಿಗಳು ರ್ಯಾಂಕ್ ಪಡೆದಿದ್ದು, ದೇಶದಾದ್ಯಂತ 180ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಮತ್ತು 30ಕ್ಕೂ ಆಧಿಕ ಖಾಸಗಿ ವಿಶ್ವವಿದ್ಯಾಲಯಗಳು ಇಂಜಿನಿಯರಿಂಗ್ ಪ್ರವೇಶಕ್ಕೆ ಕಾಮೆಡ್-ಕೆ ಪರೀಕ್ಷಾ ಫಲಿತಾಂಶ ಪರಿಗಣಿಸಲಾಗುತ್ತದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ