ಬೆಂಗಳೂರು: ಮ್ಯಾನೇಜ್ಮೆಂಟ್ ಕೋಟಾ ಅಡಿ 13 ಸಾವಿರ ಜನ ವಿದ್ಯಾರ್ಥಿಗಳು ಇದ್ದಾರೆ. ಮಾನವೀಯ ಆಧಾರದ ಮೇಲೆ ಅವರಿಗೂ ವಿದ್ಯಾರ್ಥಿ ವೇತನದ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ. ಇದಕ್ಕಾಗಿ 8-9 ಕೋಟಿ ಹಣ ವೆಚ್ಚವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಿದ್ಯಾರ್ಥಿ ವೇತನ ಬಂದಿಲ್ಲ ಅಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಇಂದು (ಅ.12) ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳನ್ನು ಕರೆದು ಚರ್ಚೆ ಮಾಡಿದ್ದೇನೆ. ಎಸ್ ಸಿ ಹಾಗೂ ಎಸ್ ಟಿ ವಿದ್ಯಾರ್ಥಿಗಳು ಮ್ಯಾನೇಜ್ಮೆಂಟ್ ಕೋಟಾದಲ್ಲಿ ಇದ್ದರು. ಅವರಿಗೆ ಹಣ ಬಿಡುಗಡೆ ಮಾಡುವ ಪ್ರಸ್ತಾಪ ಇರಲಿಲ್ಲ. ಎಸ್ಎಸ್ಎಲ್ಸಿ ತೇರ್ಗಡೆಯಾದ ಪ.ಜಾ.ಮಕ್ಕಳಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಿರಲಿಲ್ಲ. ಇದೀಗ 55 ಕೋಟಿ ಹಣ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದರು.