ಹುಬ್ಬಳ್ಳಿ: ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯನ್ನು ರಾಷ್ಟ್ರದಲ್ಲಿ ಮಟ್ಟದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಕಲಿಕೆಗೂ ಆದ್ಯತೆಯನ್ನು ನೀಡಲಾಗಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ರಾಜ್ಯಪಾಲರು ಸಂವಾದ ನಡೆಸಿದ್ದು ವಾರ್ತಾ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.
ರಾಜ್ಯಪಾಲರು ಹೇಳಿದ್ದೇನು?
ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಮುಖ್ಯ. ರಾಜ್ಯಪಾಲನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡುತ್ತಿದ್ದೇನೆ. ಕರ್ನಾಟಕ, ಕೃಷಿ ಹಾಗೂ ಕಾನೂನು ವಿಶ್ವವಿದ್ಯಾಲಯಗಳು ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಕೇಂದ್ರಗಳಾಗಿವೆ. ಕಾನೂನು ವಿಶ್ವ ವಿದ್ಯಾಲಯದಲ್ಲಿ ಓದಿದವರು ದೇಶದ ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಕೆಲಸ ನಿರ್ವಹಸಿ ಹೆಸರುಗಳಿಸಿದ್ದಾರೆ. ಕಾನೂನು ವಿಶ್ವ ವಿದ್ಯಾಲಯದ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ವಿಶ್ವ ವಿದ್ಯಾಲಯ ಸುಧಾರಣೆ ಕುರಿತು ಸಿಂಡಿಕೇಟ್ ಸದಸ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹದು. ಇವುಗಳ ಕುರಿತು ಲಿಖಿತವಾಗಿ ಮನವಿ ಸಲ್ಲಿಸಿದರೆ ಅವುಗಳನ್ನು ಪರಮಾಧ್ಯತೆ ಮೇರೆಗೆ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು.