ಬೆಂಗಳೂರು: ಸಾಕಷ್ಟು ದಿನಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ. ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಧಾರ ಮಾಡಿದ್ದು, ಈ ಬಾರಿಯ ದೀಪಾವಳಿಗೆ ವಾಹನ ಸವಾರರಿಗೆ ಬಂಪರ್ ಗಿಫ್ಟ್ ನೀಡಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 5 ರೂಪಾಯಿ ಮತ್ತು 10 ರೂಪಾಯಿ ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿತ್ತು. ಅಷ್ಟೇ ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ (ಮೌಲ್ಯ ವರ್ಧಿತ ತೆರಿಗೆ-VAT) ಅನ್ನು ಕಡಿಮೆ ಮಾಡಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒತ್ತಾಯಿಸಿದೆ. ಕೇಂದ್ರ ಒತ್ತಾಯದ ಮೇರೆಗೆ ರಾಜ್ಯ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿಮೆಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಗ್ರಾಹಕರ ಮೇಲಿದ್ದ ಹೊರೆ ಸ್ವಲ್ಪ ಪ್ರಮಾಣದಲ್ಲಿ ತಗ್ಗಲಿದೆ.
ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ. ಜನರಿಗೆ ದೀಪಾವಳಿ ಉಡಗೊರೆ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಸುಂಕ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ರಾಜ್ಯ ಸರಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.