ಬೆಂಗಳೂರು,ನ.20- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಸುವರ್ಣವಿಧಾನಸೌಧದಲ್ಲಿ ಉಭಯ ಸದನಗಳು ಸಮಾವೇಶಗೊಳ್ಳುವಂತೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಪಾಲ ತಾವರ್ಚಂದ್ ಗೆಲ್ಹೋಟ್ ಅವರು ನಿನ್ನೆ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್ನ ಅಧಿವೇಶನಗಳನ್ನು ಕರೆದಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದು ಅಧಿವೇಶನವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗಿತ್ತು. ಆನಂತರ ಈವರೆಗೂ ಅಧಿವೇಶನ ನಡೆಸಿಲ್ಲ. ಕಳೆದೆರಡು ವರ್ಷಗಳಿಂದ ಕೋವಿಡ್ನಿಂದಾಗಿ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಿರಲಿಲ್ಲ. ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವು ಶಾಸಕರು ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಆಗ್ರಹಿಸಿದ್ದರು.ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಈಗಾಗಲೇ ಘೋಷಣೆ ಮಾಡಿತ್ತು. ಪ್ರತಿ ಬಾರಿ ಅಧಿವೇಶನ ನಡೆದಾಗಲು ಸುಮಾರು 10 ದಿನಗಳ ಕಾಲ ಅಧಿವೇಶನ ನಡೆಸಿರುವ ಸಂಪ್ರದಾಯವಿದೆ. ರಾಜ್ಯದಲ್ಲಿ ಇನ್ನು ಕೋವಿಡ್ ಸಂಪೂರ್ಣವಾಗಿ ನಿವಾರಣೆಯಾಗದಿರುವ ಹಿನ್ನೆಲೆಯಲ್ಲಿ ಎಬಿಜೆಪಿ ಸರ್ಕಾರ ಎರಡನೇ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬೆಳಗಾವಿಯಲ್ಲಿ ನಡೆಯುವ ಮೊದಲ ಅಧಿವೇಶನ ಇದಾಗಲಿದೆ. ಹೀಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳು ಚಳಿಗಾಲದ ಅಧಿವೇಶನಕ್ಕೆ ಸಿದ್ದತೆ ನಡೆಸಿವೆ.