ಉತ್ತರ ಕರ್ನಾಟಕ ಪ್ರವಾಹದಿಂದ ನಲುಗುತ್ತಿದ್ದರೆ, ಅಖಂಡ ಕರ್ನಾಟಕ ಕೊರೋನಾದಿಂದ ನಲುಗುತ್ತಿದೆ. ಆದರೆ, ಇದೆಲ್ಲವನ್ನು ಸಮರ್ಥವಾಗಿ ನಿಭಾಯಿಸಬೇಕಿದ್ದ ರಾಜ್ಯ ಸರ್ಕಾರ ಮಾತ್ರ ಕೊರೋನಾ ಸಾವು, ಅಂತ್ಯ ಸಂಸ್ಕಾರ ಹಾಗೂ ಸೀಲ್ ಡೌನ್ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆಯುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರದ ಐಜೂರು ವೃತ್ತದಲ್ಲಿ ವಾಟಾಳ್ ನಾಗರಾಜ್ ಹಾಗೂ ಬೆಂಬಲಿಗರು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯದ ಜನತೆ ಕೊರೋನಾ ಹಾಗೂ ಪ್ರವಾಹದಿಂದ ನಲುಗುತ್ತಿದ್ದರೆ, ಬಿಜೆಪಿ ಸರ್ಕಾರ ಲೂಟಿ ಹೊಡೆಯಲು ನಿಂತಿದೆ ಎಂದು ಆರೋಪಿಸಿದರು.
ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಧಾನಸಭೆ ಅಧಿವೇಶನವನ್ನ ಬೆಳಗಾವಿಯ ಸುವರ್ಣ ಸೌಧದಲ್ಲಿಯೇ ನಡೆಸಬೇಕು. ಈ ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಇಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿಯೇ ನಿರ್ಮಾಣವಾಗಿರುವ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಬೇಕು. ಅಧಿವೇಶನ ಬೆಳಗಾವಿಯಲ್ಲಿ ನಡೆಯದಿದ್ದಲ್ಲಿ ಉತ್ತರ ಕರ್ನಾಟಕ ಕಡೆಗಣಿಸಿದಂತಾಗುತ್ತದೆ. ನನ್ನ ರಾಜಕೀಯ ಅನುಭವದಲ್ಲಿ ಈ ಸರ್ಕಾರದ ಸಚಿವರ ರೀತಿ ಯಾರನ್ನು ನೋಡಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.
ಇನ್ನು ರಾಜ್ಯಕ್ಕೆ ಹಿಂದಿ ಹೇರಿಕೆಯನ್ನ ವಿರೋಧಿಸಿದ ಪ್ರತಿಭಟನಾಕಾರರು, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಸರ್ಕಾರಿ ಹಾಗೂ ಖಾಸಗಿ ಉದ್ಯೋಗದಲ್ಲಿ ಈ ಮಣ್ಣಿನ ಮಕ್ಕಳಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಘೋಷಣೆ ಕೂಗಿದರು.ಉತ್ತರ ಕರ್ನಾಟಕದ ಜನತೆ ಕಳೆದ ವರ್ಷದಂತೆಯೇ ಈ ವರ್ಷವೂ ಕೂಡ ಮಳೆಯ ಆರ್ಭಟಕ್ಕೆ ಸಿಲುಕಿ ನೆರೆ ಪ್ರವಾಹದಿಂದ ತತ್ತರಿಸಿಹೋಗಿದ್ದಾರೆ. ಕಳೆದ ವರ್ಷವೂ ಈ ಭಾಗದ ಜನತೆಯ ಸಂಕಷ್ಟ ಆಲಿಸಲು ಇತ್ತ ಸುಳಿಯದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಈ ವರ್ಷವೂ ಉತ್ತರ ಕರ್ನಾಟಕ ಮಂದಿಯ ನರಕ ಯಾತನೆಯನ್ನು ನೋಡಿ ಅವರಿಗೆ ಸಾಂತ್ವನ ಹೇಳುವ ಜೊತೆಗೆ, ಪರಿಹಾರ ನೀಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಆದರೆ, ಇದುವರೆಗೂ ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಈ ದಿಕ್ಕಿನಲ್ಲಿ ಪ್ರಧಾನ ಮಂತ್ರಿಯವರು ಶೀಘ್ರವೇ ವೈಮಾನಿಕ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಸೂಕ್ತ ನೆರವು ನೀಡಬೇಕು ಎಂದು ಆಗ್ರಹಿಸಿದರು