ಚೆನ್ನೈ: ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದು, ಅವರಿಗೆ ಅಂತಾರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲಾಗುತ್ತದೆ.
ಕಳೆದ ಆಗಸ್ಟ್ 5ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿಪಿಗೆ ಚಿಕಿತ್ಸೆ ನೀಡುತ್ತಿವೆ.
ಕಳೆದ 17 ದಿನಗಳಿಂದ ಎಸ್ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಏಳು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗುತ್ತದೆ. ಕೊರೊನಾ ವೈರಸ್ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ. ವೆಂಟಿಲೇಟರ್ ಮತ್ತು ಎಕ್ಮೋ ಮೆಷಿನ್ ಸಪೋರ್ಟ್ನಿಂದ ಎಸ್ಪಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ.ಎಸ್ಪಿಬಿ ಜೊತೆಗೆ ಅವರ ಪತ್ನಿ ಸಾವಿತ್ರಿಯವರಿಗೂ ಕೂಡ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನು ಕೂಡ ಎಸ್ಪಿಬಿಯವರು ದಾಖಲಾಗಿರುವ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ
ಎಸ್ಪಿಬಿಯವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶದ್ಯಾಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ. ಜೊತೆಗೆ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಹುಷಾರಾಗಲಿ ಎಂದು ಬೇಗ ಗುಣಮುಖರಾಗಿ ಎಸ್ಪಿಬಿ ಸರ್ ಎಂದು ಗುರುವಾರ ಟ್ಟಿಟ್ಟರ್ ನಲ್ಲಿ ಟ್ರೆಂಡ್ ಮಾಡಲಾಗಿತ್ತು. ಸೆಲೆಬ್ರಿಟಿಗಳು ಸೇರಿದಂತೆ ಎಸ್ಪಿಬಿಯವರ ಸಾವಿರಾರು ಅಭಿಮಾನಿಗಳು ಟ್ವೀಟ್ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದರು.