ಗೋಕಾಕ: ಕೆಲವರು ನಮ್ಮ ಹೆಸರು ಹೇಳಿಕೊಂಡು ಎದುರಾಳಿಗೆ ಮತ ನೀಡಿ ಅಂತಾ ಹೇಳುತ್ತಿದ್ದಾರೆ. ಅದಕ್ಕೆ ಕಾರ್ಯಕರ್ತರು ಸ್ಪಂದಿಸಬೇಡಿ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪಣತೊಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ತಮ್ಮ ಹಿಲ್ ಗಾರ್ಡನ್ ಕಚೇರಿಯಲ್ಲಿ ಗೋಕಾಕ, ಅರಭಾವಿ ಮತಕ್ಷೇತ್ರದ ಏಜೆಂಟ್ ಹಾಗೂ ಮುಖಂಡರ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ನಾವು ಕಾಂಗ್ರೆಸ್ ಅಭ್ಯರ್ಥಿ ಹೊರತು ಯಾರಿಗೂ ಮತ ನೀಡಿ ಎಂದು ಹೇಳಿಲ್ಲ. ಮುಖಂಡರು ಇದಕ್ಕೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.
ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಿದ ಕಾಂಗ್ರೆಸ್ ಪಕ್ಷದ ಎಲ್ಲ ಅಭ್ಯರ್ಥಿಗಳಿಗೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಬೇಕು. ಅದರಿಂದ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನಗಳು ಬಂದರೆ ಪಕ್ಷಕ್ಕೂ ಶಕ್ತಿ ಬರಲಿದೆ. ಮುಂದಿನ ಚುನಾವಣೆಗೆ ಅಡಿಪಾಯವಾಗಲಿದೆ ಎಂದು ಹೇಳಿದರು.
ಗೋಕಾಕ, ಅರಭಾವಿ ಮತಕ್ಷೇತ್ರದಲ್ಲಿ ನೇಮಕ ಮಾಡಿರುವ ಏಜೆಂಟ್ ಗಳು ಯಾವ ರೀತಿಯಾಗಿ ಕಾರ್ಯ ನಿರ್ವಹಿಸಬೇಕು ಎಂಬುವುದರ ಬಗ್ಗೆ ಸಲಹೆ, ಸೂಚನೆ, ತಿಳುವಳಿಕೆ ನೀಡುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಹಲವಾರು ಸೂಚನೆಗಳನ್ನು ನೀಡಲಾಗಿದ್ದು, ಆ ನಿಟ್ಟಿನಲ್ಲಿ ಏಜೆಂಟ್ ರು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ, ಪಕ್ಷೇತರ ಅಭ್ಯರ್ಥಿಗಿಂತ ಹೆಚ್ಚು ಮತಗಳನ್ನು ಪಡೆಯಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಪ್ರಥಮ ಪಾಶಸ್ತ್ಯದಲ್ಲಿ ಗೆಲುವು ಪಡೆಯಬೇಕು ಎಂಬುವುದು ನಮ್ಮ ಕನಸು. ನಿನ್ನೆ ಹಲವು ಪಂಚಾಯ್ತಿಗಳಿಗೆ ಭೇಟಿ ನೀಡಿದ್ದೇವೆ. ಕಾಂಗ್ರೆಸ್ ಪರ ಮತ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.