ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಫಲಿತಾಂಶ (Council result) ಹೊರಬಿದ್ದಿದ್ದು, ವಿಧಾನ ಪರಿಷತ್ತಿನಲ್ಲಿ ಬಹುಮತದ ಕೊರತೆ ಎದುರಿಸುತ್ತಿದ್ದ ಆಡಳಿತಾರೂಢ ಬಿಜೆಪಿ (BJP) 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ವಿಪಕ್ಷ ಕಾಂಗ್ರೆಸ್ (Congress) 11 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ಇತ್ತು.
ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಮತದಾನ ನಡೆಸಲಾಗಿತ್ತು. ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿತ್ತು. ಇನ್ನು 6 ಕ್ಷೇತ್ರಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಜೆಡಿಎಸ್ (JDS), ಹಾಸನದಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗೆ ಗೆಲುವು ಸಿಕ್ಕಿದೆ.
ಬೆಂಗಳೂರಲ್ಲಿ ಬಿಜೆಪಿ ಸಂಭ್ರಮ
ಬೆಂಗಳೂರು ನಗರ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ ರೆಡ್ಡಿ (Gopinath Reddy) ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ಕ್ಷೇತ್ರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿತ್ತು. ಆದರೆ, ಅಂತಿಮವಾಗಿ ವಿಜಯಲಕ್ಷ್ಮಿ ಬಿಜೆಪಿ ಅಭ್ಯರ್ಥಿಗೆ ಒಲಿದಿದ್ದು, ಕಾಂಗ್ರೆಸ್’ಗೆ ಮುಖಭಂಗವಾಗಿದೆ. ಅಷ್ಟಕ್ಕೂ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೋಟಿವೀರ ಕೆಜಿಎಫ್ ಬಾಬು (KGF Babu) ಗೆಲುವು ನಿಶ್ಚಿತ ಎಂದೇ ಬಿಂಬಿತವಾಗಿತ್ತು. ಆದರೆ ಫಲಿತಾಂಶ ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್ ನೀಡಿದೆ. ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ ರೆಡ್ಡಿ ಗೆಲುವು ಕನ್ಫರ್ಮ್ ಆಗಿದ್ದು, ಬೆಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ನಡೆಯಿತು.
ಬೆಂಗಳೂರಲ್ಲಿ ಒಟ್ಟು 2070 ಮತಗಳು ಚಲಾವಣೆ ಆಗಿದ್ದವು. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಇನ್ನು ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಹಾಸನ ಜೆಡಿಎಸ್ ಪಾಲಿಗೆ
ಪರಿಷತ್ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಜಯ ಗಳಿಸುವ ಮೂಲಕ ಮತ್ತೆ ಪ್ರಾಬಲ್ಯ ಸಾಧಿಸಿದೆ. ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ದೇವೇಗೌಡರ (HD Devegowda) ಮೊಮ್ಮಗ ಸೂರಜ್ ರೇವಣ್ಣ (Suraj Revanna) ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗೆ 2281 ಮತ, ಕಾಂಗ್ರೆಸ್ ಅಭ್ಯರ್ಥಿಗೆ 748 ಮತ ಹಾಗೇ ಬಿಜೆಪಿ ಅಭ್ಯರ್ಥಿಗೆ 421 ಮತ ಸಿಕ್ಕಿದೆ. ಡಾ. ಸೂರಜ್ ರೇವಣ್ಣ 1533 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಕೊಡಗಲ್ಲಿ ಬಿಜೆಪಿಗೆ ಜಯ
ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ (Suja Kushalappa) 102 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ಅಭ್ಯರ್ಥಿ ಮಂಥರ್ ಗೌಡ ಸೋಲುಕಂಡಿದ್ದು, ಕೊಡಗು ಬಿಜೆಪಿ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಬೀದರ್ ನಲ್ಲಿ ಕಾಂಗ್ರೆಸ್ ಗೆ ಜಯ
ಗಡಿ ಜಿಲ್ಲೆ ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ ಪಾಟೀಲ (Bheema Rao Patil) 220 ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಗೆಲುವು
ಶಿವಮೊಗ್ಗದಲ್ಲಿ ಚಲಾಚಣೆಯಾಗಿದ್ದ 4158 ಮತಗಳಲ್ಲಿ 2208 ಮತಗಳು ಬಿಜೆಪಿ ಅಭ್ಯರ್ಥಿಯ ಪಾಲಾಗಿದ್ದು, ಬಿಜೆಪಿ ಅಭ್ಯರ್ಥಿ ಅರುಣ್ (Arun) ಗೆಲುವಿನ ನಗೆ ಬೀರಿದ್ದಾರೆ.
ಚಿತ್ರದುರ್ಗದಲ್ಲಿ ಕಾಂಗ್ರೆಸ್
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ (Somshekhar) ವಿರುದ್ಧ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಗೆ 2617 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 2263 ಮತ ಪಡೆದಿದ್ದಾರೆ.