ವಿಜಯಪುರ: ಈಗಾಗಲೇ ಹೇಳಿದಂತೆ ಸಂಕ್ರಾಂತಿ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ ಆಗಲಿದ್ದು, ಜ.20 ರೊಳಗೆ ಸಚಿವ ಸ್ಥಾನದ ಅವಕಾಶ ವಂಚಿತ ಎಲ್ಲ ಜಿಲ್ಲೆಗಳಿಗೂ ಆದ್ಯತೆ ಸಿಗಲಿದೆ. ಈ ತಿಂಗಳ 8 ರಿಂದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಭೈಟಕ್ನಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರಾಚನೆ ಸಂದರ್ಭದಲ್ಲಿ ಪಕ್ಷದ ಸರ್ಕಾರಕ್ಕೆ ವರ್ಚಸ್ಸು ತರುವ ರೀತಿಯಲ್ಲಿ ಹೆಚ್ಚು ಕ್ರಿಯಾಶೀಲತೆ ಹೊಂದಿದವರನ್ನು ಸಚಿವರನ್ನಾಗಿ ಮಾಡಬೇಕು. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ವಿಜಯಪುರ ಜಿಲ್ಲೆಗೆ ಸೂಕ್ತ ಹಾಗೂ ಗೌರವಯುತ ಸ್ಥಾನಮಾನ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದರು.